ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಅಡಳಿತ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಭದ್ರತಾ ಆಯೋಗ (ಎಸ್ಎಸ್ಸಿ) ಸ್ಥಾಪಿಸಲು ವಿಫಲವಾದ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೋಟಿಸ್ ನೀಡಲು ಆದೇಶಿಸಿತು.
ರಾಜ್ಯ ಪೊಲೀಸ್ ಕಾಯ್ದೆ 1963ರ ಸೆಕ್ಷೆನ್ 20ಎ ಪ್ರಕಾರ ಭದ್ರತಾ ಆಯೋಗ ರಚಿಸುವುದು ಕಡ್ಡಾಯ. ಅದು ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅರ್ಜಿದಾರರು ಹೇಳಿದರು.
‘ಪ್ರಕಾಶ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪೊಲೀಸ್ ಕಾಯ್ದೆಗೆ ತಿದ್ದುಪಡಿಯನ್ನು ಸರ್ಕಾರ ತಂದಿದೆ. ಆದರೆ, ಎಸ್ಎಸ್ಸಿ ರಚನೆಯನ್ನೇ ಮಾಡಿಲ್ಲ’ ಎಂದು ಅರ್ಜಿದಾರರು ದೂರಿದರು.
ಈ ಸಂಬಂಧ ಒಂದು ತಿಂಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಪೀಠ, ವಿಚಾರಣೆಯನ್ನು ಜು.29ಕ್ಕೆ ಮುಂದೂಡಿತು.