ಬೆಂಗಳೂರು: ನಗರದ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೊವಿಡ್-19 ರೋಗ ಸಂಬಂಧದ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ ನಿರ್ಮಿಸಲಾಗಿದ್ದು, ಒಟ್ಟು 200 ಹಾಸಿಗೆಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಆಸ್ಪತ್ರೆಯಲ್ಲಿ ಕೋವಿಡ್ 19 ರೋಗ ಸಂಬಂಧ ಚಿಕಿತ್ಸೆಗಾಗಿ ಕಲ್ಪಿಸಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಬಳಸುವಂತೆ ಕೋರುವ ಪತ್ರವನ್ನು ಆಸ್ಪತ್ರೆ ನಿರ್ದೇಶಕ ಡಾ. ಪಾಲ್ ಪಾರ್ಥಜಾಮ್ ಅವರು ಮೇಯರ್ ಎಂ.ಗೌತಮ್ ಕುಮಾರ್ ಹಾಗೂ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಬುಧವಾರ ಹಸ್ತಾಂತರಿಸಿದರು.
ಡಾ.ಪಾಲ್ ಪಾರ್ಥಜಾಮ್, 'ಕೋವಿಡ್-19 ಸೋಂಕಿತರು ಹಾಗೂ ಶಂಕಿತರಿಗೆ ಚಿಕಿತ್ಸೆ ನೀಡುವ ಕುರಿತು ಎಲ್ಲಾ ಸಿಬ್ಬಂದಿ, ಅಧಿಕಾರಿಗಳಿಗೂ ತರಬೇತಿ ನೀಡಲಾಗಿದೆ. 15 ಹಾಸಿಗೆಗಳು ಹಾಗೂ ವೆಂಟಿಲೇಟರ್ ವ್ಯವಸ್ಥೆ ಹೊಂದಿರುವ ತುರ್ತು ನಿಗಾ ಘಟಕವನ್ನೂ (ಐಸಿಯು) ಈ ಸಲುವಾಗಿ ಕಾಯ್ದಿರಿಸಲಾಗಿದೆ’ ಎಂದು ಮಾಹಿತಿ ನೀಡಿದರು.
'ಸರ್ಕಾರ ಹಾಗೂ ಬಿಬಿಎಂಪಿ ಪರವಾಗಿ ಸೇಂಟ್ ಜಾನ್ಸ್ ಆಸ್ಪತ್ರೆಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ' ಎಂದು ಉಪಮುಖ್ಯಮಂತ್ರಿ ಹೇಳಿದರು.
‘ಕೊರೋನಾ ಸೋಂಕು ತಡೆಗಟ್ಟಲು ಸರ್ಕಾರ ಹಾಗೂ ಬಿಬಿಎಂಪಿ ವತಿಯಿಂದ ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಿದರೂ ಅಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ’ ಎಂದು ತಿಳಿಸಿದರು.