ಬೆಂಗಳೂರು: ‘ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೊರೊನಾ ಸೋಂಕಿತರಿಗೆ ತಗುಲುವ ಚಿಕಿತ್ಸಾ ಶುಲ್ಕವನ್ನು 15 ದಿನಗಳಲ್ಲಿ ಪಾವತಿ ಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗಿದ್ದು, ಶೀಘ್ರದಲ್ಲೇ ಕ್ರಮ ವಹಿಸಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ರಾಜರಾಜೇಶ್ವರಿನಗರ ವಲಯದ ಪಾಲಿಕೆ ಸದಸ್ಯರು, ಖಾಸಗಿ ಆಸ್ಪತ್ರೆಗಳು, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಪಾಲಿಕೆ ಅಧಿಕಾರಿಗಳ ಜೊತೆಗೆ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘ಖಾಸಗಿ ಆಸ್ಪತ್ರೆಗಳಿಗೆ ಒತ್ತಡ ಹಾಗೂ ಬೆದರಿಕೆ ಹಾಕುವುದಿಲ್ಲ. ಯಾವುದೇ ಅಧಿಕಾರಿ ನಿಮಗೆ ಬೆದರಿಕೆ ಹಾಕಿದಲ್ಲಿ, ನನ್ನ ಗಮನಕ್ಕೆ ತಂದರೆ ಕ್ರಮ ಕೈಗೊಳ್ಳುತ್ತೇನೆ’ ಎಂದರು.
ರಾಜರಾಜೇಶ್ವರಿನಗರ ವಲಯ ಕೋವಿಡ್ ನಿಯಂತ್ರಣ ವಿಭಾಗದ ಮುಖ್ಯಸ್ಥ ವಿಶಾಲ್, ‘ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮದಂತೆ ಕೋವಿಡ್ ರೋಗಿಗಳಿಗೆ ಶೇ 50ರಷ್ಟು ಹಾಸಿಗೆಗಳನ್ನು ಮೀಸಲಿಡಬೇಕು’ ಎಂದರು.