ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ಕಿನ ಮೇಲ್ಸೇತುವೆ ನಿರ್ಮಿಸಲ್ಲ: ಯೋಜನೆ ಕೈಬಿಟ್ಟಿರುವ ಮಾಹಿತಿ ನೀಡಿದ ಸರ್ಕಾರ

ಹೈಕೋರ್ಟ್‌ಗೆ ಮಾಹಿತಿ
Last Updated 19 ಜೂನ್ 2019, 20:01 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ಬಸವೇಶ್ವರ ವೃತ್ತ-ಹೆಬ್ಬಾಳ ನಡುವೆ ಆರು ಪಥದ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಯೋಜನೆ ಕೈ ಬಿಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಮೇಲ್ಸೇತುವೆ ಯೋಜನೆ ಪ್ರಶ್ನಿಸಿ, ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (‍‍ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ಅಭಯ್‌.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಯೋಜನೆಯನ್ನು ಕೈಬಿಟ್ಟಿರುವ ಬಗ್ಗೆ 2017ರಲ್ಲೇ ಅಧಿಸೂಚನೆ ಹೊರಡಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಈ ಅರ್ಜಿ ವಿಚಾರಣೆ ಅವಶ್ಯಕತೆ ಇಲ್ಲ’ ಎಂಬ ಅಭಿಪ್ರಾಯದೊಂದಿಗೆ ವಿಲೇವಾರಿ ಮಾಡಿತು.

ಪ್ರಕರಣವೇನು?: ಯೋಜನೆಗೆ ನಿರ್ಧರಿಸಿ ರಾಜ್ಯ ಸರ್ಕಾರ 2016ರ ಅಕ್ಟೋಬರ್‌ 13ರಂದು ಆದೇಶ ಹೊರಡಿಸಿತ್ತು. ಇದಕ್ಕಾಗಿ ₹ 1,800 ಕೋಟಿ ವೆಚ್ಚ ಮಾಡಲು ಉದ್ದೇಶಿಸಲಾಗಿತ್ತು.

ಆಕ್ಷೇಪಣೆ: ಈ ಯೋಜನೆಯನ್ನು ಪ್ರಶ್ನಿಸಿ ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿತ್ತು.

‘ಯೋಜನೆಗೆ ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆ ಸ್ವೀಕರಿಸಿಲ್ಲ. ಕಾಮಗಾರಿಗೆ ಪರಿಸರ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಆದ್ದರಿಂದ ಯೋಜನೆ ಕೈಬಿಡುವಂತೆ ಸರ್ಕಾರ ಹಾಗೂ ಬಿಡಿಎಗೆ ನಿರ್ದೇಶಿಸಬೇಕು’ ಎಂದು ಕೋರಿತ್ತು.

ಎನ್‌ಜಿಟಿ ಆದೇಶ: ಅಂತೆಯೇ ಈ ಪ್ರಕರಣವು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಮೆಟ್ಟಿಲೇರಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮಂಡಳಿ 2017ರ ಮಾರ್ಚ್‌ನಲ್ಲಿ, ‘ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಇಲಾಖೆ ಸೇರಿದಂತೆ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯದೇ ಉಕ್ಕಿನ ಸೇತುವೆ ನಿರ್ಮಾಣ ಕಾಮಗಾರಿ ನಡೆಸುವಂತಿಲ್ಲ’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಇದರಿಂದಾಗಿ ಸರ್ಕಾರ ಈ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಅಕ್ರಮ ಕಟ್ಟಡ ವರದಿ ಸಲ್ಲಿಕೆಗೆ ಸೂಚನೆ

‘ಜೆ.ಪಿ.ನಗರ 4ನೇ ಹಂತದ ಡಾಲರ್ಸ್‌ ಕಾಲೋನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎನ್ನಲಾದ ಕಟ್ಟಡದ ಪರಿಶೀಲನೆ ನಡೆಸಿ ವರದಿ ಸಲ್ಲಿಸಿ’ ಎಂದು ಹೈಕೋರ್ಟ್, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದೇಶಿಸಿದೆ.

ಈ ಸಂಬಂಧ ಜೆ.ಪಿ. ನಗರ 4ನೇ ಹಂತದ ಡಾಲರ್ಸ್‌ ಕಾಲೋನಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಗುಂಡಾ ಭಟ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಮ‌ತ್ತು ನ್ಯಾಯಮೂರ್ತಿ ಎಚ್‌.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಬಿಬಿಎಂಪಿ ಹಿರಿಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೋರ್ಟ್‌ಗೆ ವರದಿ ಸಲ್ಲಿಸಬೇಕು. ಒಂದು ವೇಳೆ ಕಟ್ಟಡದಲ್ಲಿ ವಾಸ ಮಾಡುತ್ತಿದ್ದರೆ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.

ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರು, 177ನೇ ವಾರ್ಡ್‌ನ ಕಾರ್ಯನಿರ್ವಾಹಕ ಎಂಜಿನಿಯರ್‌, ಮುಖ್ಯ ಎಂಜಿನಿಯರ್‌ ಮತ್ತು ಎಚ್‌.ಎಸ್.ರುಕ್ಮಿಣಿ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.

ಆಕ್ಷೇಪಣೆ ಏನು?: ‘ಎಚ್.ಎಸ್. ರುಕ್ಮಿಣಿ ಎಂಬುವರು ಅಕ್ರಮವಾಗಿ ವಸತಿ ಸಹಿತ ವಾಣಜ್ಯ ಸಂಕೀರ್ಣ ನಿರ್ಮಿಸಿದ್ದಾರೆ. ವಾಸಯೋಗ್ಯ ಪತ್ರ ಪಡೆಯದೆ ಅನಧಿಕೃತವಾಗಿ ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಈ ಕುರಿತು ಬಿಬಿಎಂಪಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.

ಅರ್ಜಿದಾರರ ಪರ ಜಿ.ಆರ್‌.ಮೋಹನ್‌ ವಾದ ಮಂಡಿಸಿದರು.

ಮರಗಳ ತೆರೆವು: ಸಿಸಿಎಫ್‌ ಖುದ್ದು ಹಾಜರಿಗೆ ಆದೇಶ

‘ಖಾಸಗಿ ಕಂಪನಿಯೊಂದಕ್ಕೆ ಮಂಜೂರು ಮಾಡಿದ ಜಮೀನಿನಲ್ಲಿನ ಮರ ಕತ್ತರಿಸಿ ತೆರವುಗೊಳಿಸಲು ಆರು ವರ್ಷ ವಿಳಂಬ ಮಾಡಲಾಗಿದೆ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲು ಖುದ್ದು ಹಾಜರಾಗಿ’ ಎಂದು ಬೆಂಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ (ಸಿಸಿಎಫ್‌) ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಮೆಸರ್ಸ್ ಕೃಷಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲ ವಿಜಯ ಕುಮಾರ್ ಪಾಟೀಲ್, ‘ಪ್ರಕರಣಕ್ಕೆ ಸಂಬಂಧಿಸಿದ ಕಡತ ಮುಖ್ಯ ಅರಣ್ಯ ಸಂಕ್ಷಣಾಧಿಕಾರಿ ಮುಂದಿದೆ. ಒಂದಷ್ಟು ಕಾಲಾವಕಾಶ ನೀಡಿದರೆ ಅರ್ಜಿದಾರರ ಜಮೀನಿನಲ್ಲಿರುವ ಮರಗಳನ್ನು ಕತ್ತರಿಸಿ ತೆರವುಗೊಳಿಸಲಾಗುವುದು’ ಎಂದು ಮನವಿ ಮಾಡಿದರು.

ಇದಕ್ಕೆ ನ್ಯಾಯಮೂರ್ತಿಗಳು, ‘ಮುಖ್ಯ ಅರಣ್ಯ ಸಂಕ್ಷಣಾಧಿಕಾರಿ ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಳಂಬ ಮಾಡಿದ್ದರೆ. ಅವರ ವಿರುದ್ಧ ಯಾಕೆ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಜರುಗಿಸಬಾರದು’ ಎಂದು ಪ್ರಶ್ನಿಸಿದರು. ಇದೇ 26ರಂದು ಖುದ್ದು ಹಾಜರಾಗುವಂತೆ ಆದೇಶಿಸಿ ವಿಚಾರಣೆ ಮುಂದೂಡಿದರು.

ಪ್ರಕರಣವೇನು?: ಹೆಸರುಘಟ್ಟದ ಸಾದೇನಹಳ್ಳಿಯ ಸರ್ವೇ ನಂ. 30ರಲ್ಲಿನ ಎಂಟು ಎಕರೆ ಜಮೀನನ್ನು ಜಿಲ್ಲಾಡಳಿತದಿಂದ ನಡೆಸಿದ್ದ ಸಾರ್ವಜನಿಕ ಹರಾಜು ಪ್ರಕ್ರಿಯೆಯಲ್ಲಿ ಮೆಸರ್ಸ್ ಕೃಷಿ ಪ್ರಾಜೆಕ್ಟ್ಸ್ ಪ್ರವೇಟ್ ಲಿಮಿಟೆಡ್‌ ಕಂಪನಿ ಖರೀದಿಸಿತ್ತು.

ಜಮೀನಿನಲ್ಲಿದ್ದ ಮರಗಳನ್ನು ಕತ್ತರಿಸಿ ತೆರವುಗೊಳಿಸಲು 2013ರ ಜನವರಿ 18ರಂದು ಕಂಪನಿ ಅನುಮತಿ ಕೋರಿತ್ತು. 2015ರ ಡಿಸೆಂಬರ್‌ 16ರಂದು ಉಪ ಅರಣ್ಯಾಧಿಕಾರಿ, ಜಮೀನಿನಲ್ಲಿರುವ ಮರಗಳನ್ನು ಕತ್ತರಿಸಿ ತೆರವುಗೊಳಿಸಲು ಅಧೀನ ಸಿಬ್ಬಂದಿಗೆ ಸೂಚಿಸಿದ್ದರು. ‘ಈ ಆದೇಶವನ್ನು ಅರಣ್ಯ ಇಲಾಖೆ ಈವರೆಗೂ ಪಾಲಿಸಿಲ್ಲ’ ಎಂದು ಆಕ್ಷೇಪಿಸಿ ಅರ್ಜಿದಾರ ಕಂಪನಿ ಹೈಕೋರ್ಟ್‌ಗೆ ಮೂರನೇ ಬಾರಿಗೆ ಈ ಅರ್ಜಿ ಸಲ್ಲಿಸಿದೆ.

2019ರ ಮಾರ್ಚ್ 14ರಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿ, ‘90 ದಿನಗಳ ಒಳಗಾಗಿ ಜಮೀನಿನಲ್ಲಿರುವ ಮರಗಳನ್ನು ಕತ್ತರಿಸಿ ತೆರವುಗೊಳಿಸಲಾಗುವುದು’ ಎಂದು ಮುಚ್ಚಳಿಕೆ ನೀಡಿದ್ದರು. ‘ಈ ಮುಚ್ಚಳಿಕೆ ಪ್ರಕಾರ ನಡೆದುಕೊಂಡಿಲ್ಲ’ ಎಂದು ಆಕ್ಷೇಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT