ಬೆಂಗಳೂರು: ಸೇವಾ ಭದ್ರತೆಗೆ ಒತ್ತಾಯಿಸಿ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿರುವ ಧರಣಿಯು ಗುರುವಾರ ಎರಡು ದಿನ ಪೂರೈಸಿತು.
ಸ್ವಾತಂತ್ರ್ಯ ಉದ್ಯಾನದಲ್ಲಿ ಕುಳಿತಿರುವ ನೌಕರರು, ತಮ್ಮ ಬೇಡಿಕೆ ಈಡೇರಿಸುವವರೆಗೂ ಧರಣಿ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.
‘ರಾಜ್ಯದ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ 20 ಸಾವಿರಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನೀಡುತ್ತಿರುವ ವೇತನ ಯಾವುದಕ್ಕೂ ಸಾಲುತ್ತಿಲ್ಲ. ಅದನ್ನು ಪ್ರಶ್ನಿಸುವವರನ್ನು ಕೆಲಸದಿಂದ ತೆಗೆದುಹಾಕಲಾಗುತ್ತಿದೆ’ ಎಂದು ಧರಣಿನಿತರು ದೂರಿದರು.
‘ಎಸ್ಸೆಸ್ಸೆಲ್ಸಿ ಪಾಸಾದ ಅಭ್ಯರ್ಥಿಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಆ ರೀತಿಯಾದರೆ ಹೊರಗುತ್ತಿಗೆ ನೌಕರರು ಬೀದಿಗೆ ಬೀಳಲಿದ್ದಾರೆ. ಸರ್ಕಾರ ತನ್ನ ನಿರ್ಧಾರ ಬದಲಿಸಿಕೊಂಡು ನೌಕರರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.