ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ಗೆ ರಿಯಾಯಿತಿ ನೀಡಲು ನಿರಾಕರಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿರುವ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್ಒ), ಸೆ.8ರಂದು ರಾಜ್ಯದಾದ್ಯಂತ ಹೋರಾಟಕ್ಕೆ ಕರೆ ನೀಡಿದೆ.
‘ಕೋವಿಡ್ನಿಂದ ಆರ್ಥಿಕ ಬಿಕ್ಕಟ್ಟು ಉಂಟಾದ ಈ ಸಮಯದಲ್ಲಿ ಸರ್ಕಾರವು ಬಸ್ ಪಾಸ್ ರಿಯಾಯಿತಿಯನ್ನು ಹಿಂಪಡೆದಿರುವುದು ಅಚ್ಚರಿ ಮೂಡಿಸಿದೆ. ರಾಜ್ಯದ ಜನತೆ ಲಾಕ್ ಡೌನ್ನಿಂದ ಉಂಟಾದ ಸಮಸ್ಯೆಗಳಿಂದಲೇ ಇನ್ನೂ ಚೇತರಿಸಿಕೊಂಡಿಲ್ಲ. ಬಡ ರೈತರು ಹಾಗೂ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ಸರ್ಕಾರವೇ ಭರಿಸಬೇಕಿತ್ತು. ಶೈಕ್ಷಣಿಕ ಸಂಸ್ಥೆಗಳಿಗೆ ಶುಲ್ಕವನ್ನೇ ಹೊಂದಿಸಲು ವಿದ್ಯಾರ್ಥಿಗಳು ಪರದಾಡುತ್ತಿರುವ ಈ ಸಂದರ್ಭದಲ್ಲಿ ಬಸ್ ಪಾಸ್ನ ಹೊರೆಯನ್ನೂ ಅವರ ಮೇಲೆ ಹಾಕಿರುವುದು ಸರಿಯಲ್ಲ’ ಎಂದು ಎಐಡಿಎಸ್ಒದ ರಾಜ್ಯ ಅಧ್ಯಕ್ಷೆ ಕೆ.ಎಸ್. ಅಶ್ವಿನಿ ಹಾಗೂ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ತಿಳಿಸಿದ್ದಾರೆ.