ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿದ್ದು ಮೈದಾನದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಮೈದಾನದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಸಂಘಟನೆಗಳ ಮುಖಂಡರು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಂಗಳವಾರ ಬೆಳಿಗ್ಗೆ ಸಿದ್ದತೆಯಲ್ಲಿ ತೊಡಗಿದ್ದರು. ಪೆಂಡಾಲ್ ಸಹ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು. ಸಂಜೆ ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಪೆಂಡಾಲ್ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಿದರು.
ಸೂಕ್ಷ್ಮ ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮಂಗಳವಾರ ಪಥಸಂಚಲನ ನಡೆಸಿ ಸ್ಥಳೀಯರಲ್ಲಿ ಧೈರ್ಯ ತುಂಬಿದರು. ಸೋಮವಾರ ಜೆಜೆ ನಗರ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದರು. ಸುತ್ತಲೂ ಸಿಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೂ ಮೈದಾನದ ಸುತ್ತಲೂ ಪೊಲೀಸರು ಕಂಡುಬಂದರು.
3 ಡಿಸಿಪಿ, 21 ಎಸಿಪಿ, 47 ಮಂದಿ ಇನ್ಸ್ಪೆಕ್ಟರ್, 130 ಮಂದಿ ಪಿಎಸ್ಐ, 126 ಎಎಸ್ಐ, 900 ಕಾನ್ಸ್ಟೆಬಲ್, ಕ್ಷಿಪ್ರ ಕಾರ್ಯಪಡೆಯ 120 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮೂರು ದಿನಗಳ ಕಾಲ ಪೊಲೀಸ್ ಭದ್ರತೆ ಇರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಣೇಶೋತ್ಸವದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪಶ್ಚಿಮ ವಿಭಾಗದ ರೌಡಿ ಪಟ್ಟಿಯಲ್ಲಿರುವ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರ ವಶಕ್ಕೆ ಪಡೆಯಲಾಗಿದೆ. ಅವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದರು.
ನಗರದಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ನಡೆಸುವುದಕ್ಕೆ ಬೇಕಾದ ಎಲ್ಲ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರೂ ಸಹಕಾರ ನೀಡಬೇಕು. ಹೆಚ್ಚಿನ ನಿಗಾ ಇಡಲು ಡ್ರೋನ್ ಬಳಸಲಾಗುತ್ತಿದೆ – ಸಂದೀಪ್ ಪಾಟೀಲ್, ಆಯುಕ್ತ, ಹೆಚ್ಚುವರಿ ಪೊಲೀಸ್ ಆಯುಕ್ತ