ನವದೆಹಲಿ: ಬಗರ್ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಆರ್. ಅಶೋಕ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ತನಿಖೆಗೆ ಸೂಚಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.
ಕಳೆದ ಸೆಪ್ಟೆಂಬರ್ 25ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಶೋಕ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎ.ಬೋಬಡೆ ಹಾಗೂ ಎಲ್.ನಾಗೇಶ್ವರರಾವ್ ಅವರಿದ್ದ ಪೀಠ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.
ಈ ಸಂಬಂಧ 2017ರ ನವೆಂಬರ್ನಲ್ಲಿಯೇ ಮೊದಲ ಬಾರಿಗೆ ದೂರು ನೀಡಲಾಗಿದ್ದರೂ ಎಫ್ಐಆರ್ ದಾಖಲಾಗಿರಲಿಲ್ಲ. ಅರ್ಜಿದಾರರು ಸ್ವಂತ ಉದ್ದೇಶಕ್ಕಾಗಿ ಈ ಜಮೀನನ್ನು ಬಳಕೆ ಮಾಡಿಕೊಳ್ಳಲೆಂದು ಮಂಜೂರು ಮಾಡದಿದ್ದರೂ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಅಶೋಕ ಪರ ವಕೀಲ ಮುಕುಲ್ ರೋಹಟ್ಗಿ ನ್ಯಾಯಪೀಠಕ್ಕೆ ತಿಳಿಸಿದರು.