ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಚುನಾವಣೆ ನಡೆಸುವಂತೆ ಕೋರಲಾದ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಕುರಿತು ಪರಿಶೀಲನೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
ಅರ್ಜಿ ಸಲ್ಲಿಸಿರುವ ಚುನಾವಣಾ ಆಕಾಂಕ್ಷಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲೆ ಮೀನಾಕ್ಷಿ ಅರೋರಾ, 2020ರ ಸೆಪ್ಟೆಂಬರ್ನಲ್ಲೇ ಬಿಬಿಎಂಪಿಯ ಅಧಿಕಾರದ ಅವಧಿ ಕೊನೆಗೊಂಡಿದ್ದು, ಚುನಾವಣೆ ನಡೆದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠಕ್ಕೆ ತಿಳಿಸಿದರು.
ಬಿಬಿಎಂಪಿಯ 198 ವಾರ್ಡ್ಗಳಿಗೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿ, ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೂಡಲೇ ಸ್ಥಳೀಯ ಸಂಸ್ಥೆಗೆ ಚುನಾವಣೆ ನಡೆಸುವ ಅಗತ್ಯವಿದೆ ಎಂದರು.
‘ನೀವು ಈ ಕುರಿತು ಪ್ರಸ್ತಾಪಿಸಿದ್ದೀರಿ. ಮಿಕ್ಕಿದ್ದನ್ನು ನಮಗೆ ಬಿಡಿ. ದೇಶದ ವಿವಿಧೆಡೆ ಚುನಾವಣೆಗಳು ನಡೆಯು ತ್ತಿವೆ. ಈ ಅರ್ಜಿಗಳ ವಿಚಾರಣೆ ಕುರಿತು ಪರಿಶೀಲಿಸಲಾಗುವುದು’ ಎಂದು ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠ ತಿಳಿಸಿತು. 6 ವಾರಗಳೊಳಗೆ ಚುನಾವಣೆ ನಡೆಸುವಂತೆ ಸೂಚಿಸಿ 2020ರ ಡಿಸೆಂಬರ್ 4ರಂದು ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.