ಕೆ.ಆರ್.ಪುರ: ಬೆಂಗಳೂರು ಪೂರ್ವ ತಾಲೂಕಿನ ಎಸ್ಸೆಸ್ಸೆಲ್ಸಿಪರೀಕ್ಷಾ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆ.ಆರ್.ಪುರದ ಐಟಿಐ ವಿದ್ಯಾಮಂದಿರ, ಕರ್ನಾಟಕ ಪಬ್ಲಿಕ್ ಶಾಲೆ, ಆವಲಹಳ್ಳಿ, ಕಾಡುಗೋಡಿ, ವೈಟ್ಫೀಲ್ಡ್ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಅವರು ಭೇಟಿ ನೀಡಿದರು.
ಬಳಿಕ ಮಾತನಾಡಿದ ಅವರು,‘ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿತ್ತು. ರಾಜ್ಯದಾದ್ಯಂತ ಎರಡನೇ ದಿನವೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವುದೇ ಅಡಚಣೆಗಳಿಲ್ಲದೆ ಯಶಸ್ವಿಯಾಗಿ ನಡೆದಿವೆ’ ಎಂದರು.
‘ಶಾಲೆಗಳ ಪುನರಾರಂಭಕ್ಕೆ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ. ಅವರು ಸೋಮವಾರ ವರದಿ ನೀಡಲಿದ್ದು, ಬಳಿಕ ಮಕ್ಕಳ ಸುರಕ್ಷತೆಯ ಆದ್ಯತೆ ಮೇರೆಗೆ ಶಾಲೆಗಳನ್ನು ಆರಂಭಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು.