ಬೆಂಗಳೂರು: ವಿಭೂತಿಪುರ ಮಠದ ವತಿಯಿಂದ ನೀಡುವ ಈ ಸಾಲಿನ ‘ಸುವರ್ಣಶ್ರೀ’ ಪ್ರಶಸ್ತಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಡಾ.ಕೆ.ಶಿವನ್ ಹಾಗೂ ನಿಕಟಪೂರ್ವ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಹಾಗೂ ‘ಜಾನಪದ ವಿಭೂತಿ ಪ್ರಶಸ್ತಿ’ಗೆ ಕೊಪ್ಪಳ ಜಿಲ್ಲೆಯ ಸಿದ್ಧಾಪುರದ ಹಗಲುವೇಷ ಕಲಾವಿದ ವಿಭೂತಿ ಗುಂಡಪ್ಪ ಆಯ್ಕೆ ಆಗಿದ್ದಾರೆ.
ಸುವರ್ಣಶ್ರೀ ಪ್ರಶಸ್ತಿಯು ತಲಾ ₹50 ಸಾವಿರ ನಗದು, ಕಂಚಿನ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ಹಾಗೂ ಜಾನಪದ ವಿಭೂತಿ ಪ್ರಶಸ್ತಿಯು ₹25 ಸಾವಿರ ನಗದು, ಕಂಚಿನ ಪ್ರಶಸ್ತಿ ಹಾಗೂ ನೆನಪಿನ ಕಾಣಿಕೆಯನ್ನು ಒಳಗೊಂಡಿದೆ.
ಪ್ರಸನ್ನರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಇದೇ 25ರಂದು ಬೆಳಿಗ್ಗೆ 11 ಗಂಟೆಗೆ ಮಠದ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಸುವರ್ಣಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ.
‘ಜಾನಪದ ವಿಭೂತಿ’ ಪ್ರಶಸ್ತಿಯನ್ನು ನವೆಂಬರ್ 24ರಂದು ಸಂಜೆ 6 ಗಂಟೆಗೆ ನಡೆಯುವಜಾನಪದೋತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಎಸ್.ಸವದಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.