ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2021’ರ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಶನಿವಾರ ಏರ್ಪಡಿಸಿದ್ದ ‘ಸೈಕ್ಲಥಾನ್’ಗೆ ಆಡಳಿತಾಧಿಕಾರಿ ಗೌರವ್ ಗುಪ್ತ ಚಾಲನೆ ನೀಡಿದರು.
‘ನಗರದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಲು ಸೈಕ್ಲಥಾನ್ ಹಮ್ಮಿಕೊಳ್ಳಲಾಗಿದೆ. ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವ ಮೂಲಕ ನಗರಕ್ಕೆ ಉತ್ತಮ ಅಂಕ ಬರಲು ಸಹಕರಿಸಬೇಕು’ ಎಂದು ಗೌರವ್ ಗುಪ್ತ ಹೇಳಿದರು.
‘ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ಡಲ್ಟ್ ವತಿಯಿಂದ ನಗರದಲ್ಲಿ ಸೈಕಲ್ ಪಥಗಳನ್ನು ಹಾಗೂ ಸುರಕ್ಷಿತ ಪಾದಚಾರಿ ಮಾರ್ಗಗಳನ್ನು ನಿರ್ಮಿಸಲಾಗುತ್ತಿದೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವುಮಾಡಿಕೊಡಲಾಗುತ್ತಿದೆ’ ಎಂದರು.
ವಿಶೇಷ ಆಯುಕ್ತ(ಕಸ ವಿಲೇವಾರಿ) ಡಿ.ರಂದೀಪ್, ‘ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಯಶಸ್ಸಿಗಾಗಿ ನಾಗರಿಕರ ಸಹಭಾಗಿತ್ವ ಅಗತ್ಯ. ನಗರವನ್ನು ಸ್ವಚ್ಛ ಸುಂದರವಾಗಿ ಮಾಡಲು ಪಾಲಿಕೆ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕಸ ವಿಲೇವಾರಿ ಪದ್ದತಿಯಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದೆ. ನಾಗರಿಕರಿಗೆ ಸ್ವಚ್ಛತೆ ಬಗ್ಗೆ ತಿಳುವಳಿಕೆ ಹಾಗೂ ಕಸ ವಿಂಗಡಣೆ ಮಾಡುವ ಬಗ್ಗೆ ಅರಿವು ಮೂಡಿಸಲಾಗುತ್ತಿದೆ’ ಎಂದರು.
‘ಈ ಬಾರಿಯ ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2021ರಲ್ಲಿ ಉತ್ತಮ ರ್ಯಾಂಕ್ ಪಡೆಯಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಲಾಗಿದ್ದು, ಈಗಾಗಲೇ ರಂಗೋಲಿ ಹಬ್ಬ, ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ನಡೆಸಲಾಗಿದೆ. ಇನ್ನೂ ಬೀದಿ ನಾಟಕ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳನ್ನು ರೂಪಿಸಿ ನಾಗರಿಕರಲ್ಲಿ ಹೆಚ್ಚು ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ನಾಗರಿಕರು ಉತ್ತಮ ಪ್ರತಿಕ್ರಿಯೆ ನೀಡುವ ಉತ್ತಮ ಅಂಕ ಸಿಗಲು ಸಾಧ್ಯ’ ಎಂದು ತಿಳಿಸಿದರು.
ಸೈಕ್ಲಥಾನ್ ಸಾಗಿದ ಮಾರ್ಗ: ಬಿಬಿಎಂಪಿ ಕೇಂದ್ರ ಕಚೇರಿಯಿಂದ ಹೊರಟ ಸೈಕಲ್ ಸವಾರರು ಕಬ್ಬನ್ ಉದ್ಯಾನ, ಕಂಟ್ರಿ ಕ್ಲಬ್, ವಿಧಾನಸೌಧ, ಕಾಫಿ ಬೋರ್ಡ್, ಚಿನ್ನಸ್ವಾಮಿ ಸ್ಟೇಡಿಯಂ, ಯುಬಿ ಸಿಟಿ, ಮಲ್ಯ ಆಸ್ಪತ್ರೆ ಮೂಲಕ ಸಾಗು ಪುನಃ ಪಾಲಿಕೆ ಕೇಂದ್ರ ಕಚೇರಿಗೆ ಮರಳಿದರು. ಕಾರ್ಯಕ್ರಮದಲ್ಲಿ ವಿಶೇಷ ಆಯುಕ್ತ (ಆಡಳಿತ) ಜೆ.ಮಂಜುನಾಥ್, ಜಂಟಿ ಆಯುಕ್ತರ (ಕಸ ವಿಲೇವಾರಿ) ಸರ್ಫರಾಜ್ ಖಾನ್, ಮುಖ್ಯ ಎಂಜಿನಿಯರ್ (ಕಸ ವಿಲೇವಾರಿ) ವಿಶ್ವನಾಥ್ ಭಾಗವಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.