ಪೀಣ್ಯ ದಾಸರಹಳ್ಳಿ: ‘ದೇಶದ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಕೊರತೆ ಇದೆ. ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕಿದೆ. ಹೆಚ್ಚಿನ ಆವಿಷ್ಕಾರಗಳಿಗೆ ಒತ್ತು ನೀಡಲಾಗುತ್ತಿದೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕ ಶಾಖೆ ಹಾಗೂ ಐಎಂಎಸ್ ಫೌಂಡೇಷನ್ ಆಶ್ರಯದಲ್ಲಿ ಆಯೋಜಿಸಿದ್ದ ಮೂರು ದಿನಗಳ ‘ಇಂಡಿಯಾ ಮ್ಯಾನುಫ್ಯಾಕ್ಚರಿಂಗ್ ಶೋ’ ವೀಕ್ಷಿಸಿ ಅವರು ಮಾತನಾಡಿದರು.
‘ಆಧುನಿಕ ಯಂತ್ರೋಪಕರಣ, ತಂತ್ರಜ್ಞಾನದ ಮೂಲಕ ರೈತರನ್ನು ಆತ್ಮನಿರ್ಭರ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಯೋಜನೆ ರೂಪಿಸಿದ್ದಾರೆ. ಅದು ಕೇವಲ ಬಾಯಿಮಾತಿನಿಂದಲ್ಲ. ಅದಕ್ಕಾಗಿ ಬಜೆಟ್ ನೀಡಲಾಗಿದೆ. ಆರ್ಥಿಕವಾಗಿ ಕೃಷಿಕರಿಗೆ ನೆರವಾಗಲು ಕೇಂದ್ರ ಸರ್ಕಾರ ಬದ್ಧವಾಗಿದೆ’ ಎಂದರು.
‘ಡ್ರೋನ್ ಮೂಲಕ ಔಷಧಿ ಸಿಂಪಡಣೆ, ಭೂಮಿಯನ್ನು ಅಳತೆ ಮಾಡುವುದು ಸೇರಿ ಕೆಲವು ಪರಿಣಾಮಕಾರಿ ತಂತ್ರಜ್ಞಾನವನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿದೆ' ಎಂದು ಹೇಳಿದರು.
ಲಘು ಉದ್ಯೋಗ ಭಾರತಿ ಕರ್ನಾಟಕ ಶಾಖೆ ಅಧ್ಯಕ್ಷ ಸಚಿನ್ ಸಬ್ನೀಸ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಅಶ್ವಥ್ ನಾರಾಯಣ್ ಹಾಜರಿದ್ದರು.