ಬೆಂಗಳೂರು: 75ನೇ ಗಣರಾಜ್ಯೋತ್ಸವದ ಅಂಗವಾಗಿ ಶುಕ್ರವಾರ ನಗರದಾದ್ಯಂತ ಶಾಲಾ, ಕಾಲೇಜುಗಳಲ್ಲಿ, ಸಂಘ ಸಂಸ್ಥೆಗಳಲ್ಲಿ, ಉದ್ಯಾನ, ಆಟೊ ನಿಲ್ದಾಣಗಳಲ್ಲಿ, ವಿವಿಧ ಕಚೇರಿಗಳಲ್ಲಿ, ತ್ರಿವರ್ಣ ಧ್ವಜಗಳು ಹಾರಾಡಿದವು.
ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಸಹ ನಡೆದವು.
ಪೌರಕಾರ್ಮಿಕ ಮಹಿಳೆ ಧ್ವಜಾರೋಹಣ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಶಾಸಕರ ಕಚೇರಿಯಲ್ಲಿ ಪೌರ ಕಾರ್ಮಿಕ ಮಹಿಳೆ ಧ್ವಜಾರೋಹಣ ನೆರವೇರಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದ ಸಚಿವರು, ಸ್ವ ಕ್ಷೇತ್ರದಲ್ಲಿ ತಮ್ಮ ಅನುಪಸ್ಥಿತಿಯಲ್ಲಿ ಪೌರ ಕಾರ್ಮಿಕರಿಂದ ಧ್ವಜರೋಹಣ ಕಾರ್ಯ ನೆರವೇರಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು.
ದಿನೇಶ್ ಗುಂಡೂರಾವ್ ಅವರ ಪುತ್ರಿ ಅನನ್ಯ ರಾವ್ ಧ್ವಜವಂದನೆ ಸಲ್ಲಿಸಿದರು. ಧ್ವಜಾರೋಹಣದ ಬಳಿಕ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಬಿಎಂಟಿಸಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್. ಧ್ವಜಾರೋಹಣ ಮಾಡಿದರು. ಮಹಾತ್ಮ ಗಾಂಧೀಜಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣರ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು. ಬಿಎಂಟಿಸಿ ನಿರ್ದೇಶಕಿ (ಭದ್ರತಾ ಮತ್ತು ಜಾಗೃತ) ಕಲಾ ಕೃಷ್ಣಸ್ವಾಮಿ, ನಿರ್ದೇಶಕಿ (ಮಾಹಿತಿ ಮತ್ತು ತಂತ್ರಜ್ಞಾನ) ಶಿಲ್ಪಾ ಎಂ. ಭಾಗವಹಿಸಿದ್ದರು.
ಗೋವಿಂದರಾಜನಗರ: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಮತ್ತು ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.
ಮಾಜಿ ಸಚಿವ ವಿ.ಸೋಮಣ್ಣ, ಬಿಜೆಪಿ ಮುಖಂಡ ಅರುಣ್ ಸೋಮಣ್ಣ, ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ರತ್ಮಮ್ಮ, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ರವೀಂದ್ರ, ಮೋಹನ್ ಕುಮಾರ್, ಬಾಬಿ, ವೆಂಕಟೇಶ್, ದಾಸೇಗೌಡ, ಪಲ್ಲವಿ ಚನ್ನಪ್ಪ, ರಾಜೇಶ್ವರಿ ಬೆಳಗೊಡ್, ರೂಪಾ ಲಿಂಗೇಶ್, ಜಯರತ್ನ ಭಾಗವಹಿಸಿದ್ದರು.
ಕೆಪಿಸಿಸಿ ಕಚೇರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಚೇರಿ ಆವರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಧ್ವಜಾರೋಹಣ ನೆರವೇರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
ರಾಜಭವನ: ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಜಭವನದ ಅಂಗಳದಲ್ಲಿರುವ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿದರು.
ಬೆಸ್ಕಾಂ: ‘ಜಾತ್ಯತೀತ ಮತ್ತು ಸಮ ಸಮಾಜದ ನಿರ್ಮಾಣ ಗಣರಾಜ್ಯ ಹಾಗೂ ಸಂವಿಧಾನದ ಆಶಯ. ಈ ಆಶಯಕ್ಕೆ ತಕ್ಕಂತೆ ದೇಶ ಪ್ರಗತಿ ಸಾಧಿಸುತ್ತಿದೆಯೇ ಎಂಬ ಬಗ್ಗೆ ಅವಲೋಕಿಸಬೇಕಾದ ಅಗತ್ಯವಿದೆ. ಈ ಆಶಯಗಳಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು’ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಮಹಾಂತೇಶ ಬೀಳಗಿ ತಿಳಿಸಿದರು.
ಬೆಸ್ಕಾಂ ನಿಗಮ ಕಚೇರಿಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಬೆಸ್ಕಾಂ ನಿರ್ದೇಶಕ (ಹಣಕಾಸು) ದರ್ಶನ್ ಜೆ., ನಿರ್ದೇಶಕ (ತಾಂತ್ರಿಕ) ಎಚ್.ಜೆ. ರಮೇಶ್., ಪ್ರಧಾನ ವ್ಯವಸ್ಥಾಪಕ (ಸಂಗ್ರಹಣೆ) ಶಿವಪ್ರಕಾಶ್, ಪ್ರಧಾನ ವ್ಯವಸ್ಥಾಪಕರಾದ ಪಾಲನೇತ್ರಾ, ಎಸ್.ಸಿ. ರಾಮಕೃಷ್ಣಪ್ಪ, ಉಪಪ್ರಧಾನ ವ್ಯವಸ್ಥಾಪಕ (ಕ್ಯುಎಸ್ ಆ್ಯಂಡ್ ಎಸ್) ರವೀಂದ್ರ, ಮುಖ್ಯ ಗುಮಾಸ್ತ ಅವೀನ್ ಉಪಸ್ಥಿತರಿದ್ದರು.
ಬೆಳ್ಳಿ ಪದಕ ಪ್ರದಾನ
ಗಣರಾಜ್ಯೋತ್ಸವ ಪ್ರಯುಕ್ತ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಏಳು ವರ್ಷಗಳಿಂದ ಅಪಘಾತ ರಹಿತವಾಗಿ ಬಸ್ ಚಾಲನೆ ಮಾಡಿದ ಚಾಲಕರಿಗೆ ಬೆಳ್ಳಿ ಪದಕ ಹಾಗೂ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ನಿರ್ದೇಶಕಿ (ಸಿಬ್ಬಂದಿ ಮತ್ತು ಜಾಗೃತ) ಕೆ.ನಂದಿನಿ ದೇವಿ ಹಾಜರಿದ್ದರು.
‘ಎಲ್ಲ ಧರ್ಮಗ್ರಂಥಗಳಿಗಿಂತ ಸಂವಿಧಾನ ಶ್ರೇಷ್ಠ’
ಸಂವಿಧಾನವು ಎಲ್ಲ ಧರ್ಮಗ್ರಂಥಗಳಿಗಿಂತ ಶ್ರೇಷ್ಠ ಎಂದು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು. ಗಣರಾಜ್ಯೋತ್ಸವದ ಪ್ರಯುಕ್ತ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಶಾಸಕ ದಿನಕರ್ ಶೆಟ್ಟಿ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ ದೆಹಲಿ ಮಾಜಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಉಪಸ್ಥಿತರಿದ್ದರು.
‘ತೆರಿಗೆಯಲ್ಲಿ ರಿಯಾಯಿತಿ ನೀಡಲು ಪ್ರಸ್ತಾವ’
ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಪಾವತಿಸದಿರುವವರನ್ನು ಪಾವತಿಸುವಂತೆ ಮಾಡಲು ಎರಡು ರಿಯಾಯಿತಿಗಳನ್ನು ನೀಡುವ ಪ್ರಸ್ತಾವ ಇದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಬಿಬಿಎಂಪಿ ಆವರಣದಲ್ಲಿ ಗಣರಾಜ್ಯೋತ್ಸವ ಆಚರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ದಂಡದ ಮೊತ್ತದಲ್ಲಿ ಮತ್ತು ಬಡ್ಡಿಯಲ್ಲಿ ರಿಯಾಯಿತಿ ನೀಡಲು ಕಾನೂನು ತಿದ್ದುಪಡಿ ಮಾಡುವ ಪ್ರಸ್ತಾವವನ್ನು ಬಿಬಿಎಂಪಿಯಿಂದ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಆಡಳಿತಗಾರ ರಾಕೇಶ್ ಸಿಂಗ್ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಹರೀಶ್ ಕುಮಾರ್ ಶಿವಾನಂದ್ ಕಲ್ಕೆರೆ ಪ್ರೀತಿ ಗೆಹಲೋತ್ ಪೂರ್ವ ವಲಯ ಆಯುಕ್ತ ಸ್ನೇಹಲ್ ಉಪ ಆಯುಕ್ತ ಮಂಜುನಾಥ ಸ್ವಾಮಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.