ಬೆಂಗಳೂರು: ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಒಂದು ಕೋಟಿ ಸಸಿ ನೆಡಲು ಪೊಲೀಸರು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಬುಧವಾರದಿಂದ ಹಂತ ಹಂತವಾಗಿ ಸಸಿ ನೆಡುವ ಕೆಲಸ ಆರಂಭವಾಗಲಿದೆ.
ವಿಶ್ವ ಪರಿಸರ ದಿನದ ಅಂಗವಾಗಿ ಗೋ ಗ್ರೀನ್ ರೆವೆಲ್ಯೂಷನ್ ಸಂಘಟನೆ ಸಹಯೋಗದಲ್ಲಿ ಪೊಲೀಸರು ಈ ಅಭಿಯಾನ ರೂಪಿಸಿದ್ದಾರೆ. ಪೊಲೀಸ್ ಠಾಣೆಗಳು, ಪೊಲೀಸ್ ವಸತಿ ಗೃಹಗಳ ಆವರಣ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಗುರಿ ಇಟ್ಟುಕೊಂಡಿದ್ದಾರೆ.
ಆಡುಗೋಡಿಯಲ್ಲಿರುವ ಸಿಎಆರ್ (ನಗರ ಸಶಸ್ತ್ರ ಮೀಸಲು ಪಡೆ) ದಕ್ಷಿಣ ವಿಭಾಗದ ಮೈದಾನದಲ್ಲಿ ಬುಧವಾರ (ಜೂನ್ 5) ನಡೆಯಲಿರುವ ಕಾರ್ಯಕ್ರಮದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಪರಿಸರ ತಜ್ಞ ಎ.ಎನ್. ಯಲ್ಲಪ್ಪರೆಡ್ಡಿ ಹಾಗೂ ಕಮಿಷನರ್ ಬಿ. ದಯಾನಂದ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
‘ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಮತ್ತಷ್ಟು ಸಸಿಗಳನ್ನು ನೆಡುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಒಂದು ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.