ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ

Published 17 ಮಾರ್ಚ್ 2024, 23:30 IST
Last Updated 17 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಹೊಸಕೆರೆಹಳ್ಳಿಯ ಕೃಷ್ಣ ಬ್ಯಾಂಕರ್ಸ್ ಮತ್ತು ಜ್ಯುವೆಲರ್ಸ್ ಮಳಿಗೆಯಲ್ಲಿ ಮಾರ್ಚ್ 4ರಂದು ಕಳ್ಳತನ ನಡೆದಿತ್ತು. ಈ ಬಗ್ಗೆ ಮಾಲೀಕ ದೂರು ನೀಡಿದ್ದರು. ಆರೋಪಿಗಳಾದ ಮುಬಾರಕ್ ಹಾಗೂ ಅಸ್ಗರ್‌ನನ್ನು ತಮಿಳುನಾಡಿನಲ್ಲಿ ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರೋಪಿಗಳಿಂದ ₹2.70 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ತಿಳಿಸಿವೆ.

‘ಚಿನ್ನದ ಉಂಗುರ ಖರೀದಿಸುವ ನೆಪದಲ್ಲಿ ಆರೋಪಿಗಳು ಮಳಿಗೆಗೆ ಹೋಗಿದ್ದರು. ವಿವಿಧ ವಿನ್ಯಾಸದ ಉಂಗುರ ತೋರಿಸುವಂತೆ ಸಿಬ್ಬಂದಿಗೆ ಹೇಳಿದ್ದರು. ಸಿಬ್ಬಂದಿ, ಉಂಗುರ ತೋರಿಸುವುದರಲ್ಲಿ ನಿರತರಾಗಿದ್ದರು. ಇದೇ ಸಂದರ್ಭದಲ್ಲಿ ಚಿನ್ನದ ಉಂಗುರವನ್ನು ಆರೋಪಿಗಳು ಕದ್ದಿಟ್ಟುಕೊಂಡಿದ್ದರು. ಯಾವ ಉಂಗುರವೂ ಸರಿ ಇಲ್ಲವೆಂದು ಹೇಳಿ ಮಳಿಗೆಯಿಂದ ಕಾಲ್ಕಿತ್ತಿದ್ದರು’ ಎಂದು ಮೂಲಗಳು ಹೇಳಿವೆ.

‘ಕೆಲ ನಿಮಿಷಗಳ ನಂತರ ಪರಿಶೀಲನೆ ನಡೆಸಿದಾಗ, ಉಂಗುರ ಕಳ್ಳತನವಾಗಿರುವುದು ಗೊತ್ತಾಗಿತ್ತು. ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿತ್ತು. ಅದೇ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ತಿಳಿಸಿವೆ.

ಪೊಲೀಸರ ಮೇಲೆ ಹಲ್ಲೆಗೆ ಯತ್ನ: ‘ಕೃತ್ಯ ಎಸಗಿದ್ದ ನಂತರ ಆರೋಪಿಗಳು ತಮಿಳುನಾಡಿಗೆ ಹೋಗಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರ ತಂಡ ತಮಿಳುನಾಡಿಗೆ ಹೋಗಿದ್ದರು. ಪೊಲೀಸರ ಮೇಲೆಯೇ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದರು’ ಎಂದು ಮೂಲಗಳು ಹೇಳಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT