ಬೆಂಗಳೂರು: ರಾಜ್ಯದಲ್ಲಿ ಹಿರಿಯ ಅಧಿಕಾರಿಗಳು ಆಡಳಿತ ನಡೆಸುವ ವೇಳೆ ಕನ್ನಡವನ್ನು ಕಡೆಗಣಿಸಿ, ಇಂಗ್ಲಿಷ್ನಲ್ಲಿಯೇ ವ್ಯವಹರಿಸುತ್ತಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಎಲ್ಲ ಅಧಿಕಾರಿಗಳು ಶೇ 100ರಷ್ಟು ಕನ್ನಡವನ್ನೇ ಬಳಸಲು ಸೂಚನೆ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
‘ಕನ್ನಡವನ್ನು ಆಡಳಿತದ ಎಲ್ಲ ಹಂತದಲ್ಲಿ ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ರಾಜ್ಯಸರ್ಕಾರ ಆದೇಶಿಸಿದೆ. ಆದರೆ, ಇದು ಪಾಲನೆಯಾಗುತ್ತಿಲ್ಲ. ಕಡ್ಡಾಯವಾಗಿ ಕನ್ನಡವನ್ನು ಬಳಸಲು ಸರ್ಕಾರ ಮತ್ತೊಮ್ಮೆ ಸುತ್ತೋಲೆ ಹೊರಡಿಸಬೇಕು’ ಎಂದು ಒತ್ತಾಯಿಸಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.