ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಅಪಘಾತ: ಟೆಕಿ ಸೇರಿದಂತೆ ಮೂವರ ಸಾವು

ಹೊಸ ವರ್ಷದ ಪಾರ್ಟಿ ಮುಗಿಸಿಕೊಂಡು ತೆರಳುವಾಗ ಅಪಘಾತ
Published 1 ಜನವರಿ 2024, 23:41 IST
Last Updated 1 ಜನವರಿ 2024, 23:41 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷದ ಪಾರ್ಟಿಗಳನ್ನು ಮುಗಿಸಿಕೊಂಡು ಮನೆಗೆ ತೆರಳುವಾಗ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಟೆಕಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ.

ಬೆಳ್ಳಂದೂರು ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯ ಏಕಮುಖ ಸಂಚಾರ ರಸ್ತೆಯಲ್ಲಿ ಆಟೊ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.

ಬೆಳ್ಳಂದೂರು ನಿವಾಸಿ ರವಿ ಕಾರ್ತಿಕೇಯ (29) ಮೃತ ಟೆಕಿ.

ಅವರ ಸ್ನೇಹಿತರಾದ ಅರ್ಬಾಜ್‌ ಖಾನ್‌, ಜೇವಾ, ಗಾರ್ಗಿ ಗುಪ್ತಾ ಹಾಗೂ ಆಟೊ ಚಾಲಕ ಶಾಕೀಬ್‌ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ರವಿ ಕಾರ್ತಿಕೇಯ ಹರಿಯಾಣದವರು. ಭಾನುವಾರ ರಾತ್ರಿ ಹೊಸ ವರ್ಷದ ನಿಮಿತ್ತ ಮೂವರು ಸಾಫ್ಟ್‌ವೇರ್‌ ಎಂಜಿನಿಯರ್‌ ಸ್ನೇಹಿತರ ಜತೆಗೆ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿಕೊಂಡು ಸ್ನೇಹಿತರ ಜತೆಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಹರಳೂರು-ಕಸವನಹಳ್ಳಿ ರಸ್ತೆಯಲ್ಲಿ ಏಕಮುಖ ಸಂಚಾರವಿದ್ದರೂ ಆಟೊ ಚಾಲಕ ವಿರುದ್ಧ ದಿಕ್ಕಿನಿಂದ ಹೊರಟ್ಟಿದ್ದ. ಆಗ ವೇಗವಾಗಿ ಬಂದ ಕಾರೊಂದು ಆಟೊಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ಹೇಳಿದರು.

ಡಿವೈಡರ್‌ಗೆ ಡಿಕ್ಕಿ–ಬೈಕ್‌ ಸವಾರ ಸಾವು:
ಹೆಣ್ಣೂರು ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬೈಕ್‌ ನಿಯಂತ್ರಣಕ್ಕೆ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಚರಕನಹಳ್ಳಿ ನಿವಾಸಿ ಚೇತನ್(22) ಮೃತ ಸವಾರ.

ಹೊಸ ವರ್ಷದ ಪಾರ್ಟಿ ಮುಗಿಸಿಕೊಂಡು ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದರು, ಆಗ ಕೊತ್ತನೂರು ಮುಖ್ಯರಸ್ತೆಯಲ್ಲಿ ಅತಿವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದರು.

ವಿದ್ಯುತ್‌ ಕಂಬಕ್ಕೆ ಡಿಕ್ಕಿ:

ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ ಬೈಕ್‌ವೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಗಾಯಗೊಂಡಿದ್ದಾರೆ.

ಸಿದ್ದಾಪುರ ನಿವಾಸಿ ಧೀರಜ್‌(21) ಮೃತ ಸವಾರ.

ಈತನ ಸ್ನೇಹಿತ ರಾಕೇಶ್‌ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಲ್ಲೂರಹಳ್ಳಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಉತ್ತರ ಪ್ರದೇಶದ ಮೂಲದ ಧೀರಜ್‌ ಹಾಗೂ ಆತನ ಸ್ನೇಹಿತ ರಾಕೇಶ್‌ ಸಿದ್ದಾಪುರದಲ್ಲಿ ಬಾಡಿಗೆ ರೂಮ್‌ನಲ್ಲಿ ನೆಲೆಸಿದ್ದರು. ಹೊಸ ವರ್ಷದ ಹಿನ್ನೆಲೆಯಲ್ಲಿ ಇಬ್ಬರು ರಾತ್ರಿ ಸ್ನೇಹಿತರ ಜತೆ ಸೇರಿಕೊಂಡು ಪಾರ್ಟಿ ಮಾಡಿದ್ದರು. ಬಳಿಕ ಪಾರ್ಟಿ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ರೂಮ್‌ ಕಡೆಗೆ ಹೊರಟ್ಟಿದ್ದರು. ಆಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT