ಬೆಂಗಳೂರು: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ(ಟಿಎಂಸಿ) ಮೇಲ್ದರ್ಜೆಗೇರಿಸಲು ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ವಕೀಲ ವೆಂಕಟೇಶ್ ದೊಡ್ಡೇರಿ ಅವರು ಅರ್ಜಿ ಸಲ್ಲಿಸಿದ್ದು, ‘ಬೆಂಗಳೂರಿನಿಂದ 45 ಕಿಲೋ ಮೀಟರ್ ದೂರದಲ್ಲಿರುವ ತ್ಯಾಮಗೊಂಡ್ಲು ಗ್ರಾಮ ಪಂಚಾಯಿತಿಯಲ್ಲಿ ಸುಮಾರು 15 ಸಾವಿರ ಜನಸಂಖ್ಯೆ ಇದೆ. ಇಡೀ ಪ್ರದೇಶ ನಗರೀಕರಣಗೊಂಡಿದೆ’ ಎಂದು ತಿಳಿಸಿದ್ದಾರೆ.
‘ತಿಪ್ಪಶೆಟ್ಟಿಹಳ್ಳಿ ಮತ್ತು ಬೀರಗೊಂಡನಹಳ್ಳಿಯನ್ನೂ ಪಂಚಾಯಿತಿ ವ್ಯಾಪ್ತಿಗೆ ಸೇರಿಸಲು ಪ್ರಸ್ತಾಪಿಸಲಾಗಿದೆ. ಹೀಗಾಗಿ, ಪಟ್ಟಣ ಪಂಚಾಯಿತಿಯಾಗಲು ಅರ್ಹವಾಗಿದೆ. ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ವಿವರಿಸಿದ್ದಾರೆ.