ಬಿಡದಿ: ಟೊಯೊಟಾ ಕಾರ್ಮಿಕರ ಸಮಸ್ಯೆ ಕುರಿತು ಸದನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಾರ್ಖಾನೆ ಎದುರು ಭಾನುವಾರ ಕಾರ್ಮಿಕರ 84ನೇ ದಿನದ ಮುಷ್ಕರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಖಾನೆ ಲಾಕ್ಔಟ್ ಆದಾಗ ಸರ್ಕಾರ ಕಾರ್ಮಿಕರ ಪರವಾಗಿ ನಿಲ್ಲಬೇಕಿತ್ತು. ಆದರೆ, ಅವರ ಬೇಜವಾಬ್ದಾರಿಯಿಂದ ಇಷ್ಟು ದಿನಗಳ ಕಾಲ ಕಾರ್ಮಿಕರು ಹೋರಾಟ ನಡೆಸಿದ್ದಾರೆ. ಸರ್ಕಾರ, ಸಚಿವರು ಹಾಗೂ ಕಾರ್ಖಾನೆ ಆಡಳಿತ ಮಂಡಳಿಯು ಅವರನ್ನು ಕರೆದು ಮಾತನಾಡಬೇಕಿತ್ತು. ಅದನ್ನು ಬಿಟ್ಟು ‘ನ್ಯಾಯಾಲಯ ಇದೆ. ಅಲ್ಲಿ ಬಗೆಹರಿಸಿಕೊಳ್ಳಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
‘ಯಾವುದೇ ಬಹುರಾಷ್ಟ್ರೀಯ ಕಂಪನಿಗಳು ಇಲ್ಲಿ ಬಂಡವಾಳ ಹೂಡಿಕೆ ಮಾಡಲು ಅವಕಾಶ ಇದೆ. ಆದರೆ, ಅವರು ನಮ್ಮ ಜನಕ್ಕೆ ಉದ್ಯೋಗ ನೀಡಬೇಕು. ಅದು ಬಿಟ್ಟು ಅಲ್ಲಿನ ಕಾನೂನು ಇಲ್ಲಿ ಪಾಲಿಸಲು ಸಾಧ್ಯವಿಲ್ಲ’ ಎಂದರು.
ವಿಧಾನ ಪರಿಷತ್ ಸದಸ್ಯರಾದ ಸಿ.ಎಂ. ಲಿಂಗಪ್ಪ, ಎಸ್. ರವಿ, ಮಾಜಿ ಶಾಸಕರಾದ ಎಚ್.ಸಿ. ಬಾಲಕೃಷ್ಣ, ಕೆ.ರಾಜು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ಎನ್. ಅಶೋಕ್, ತಾ.ಪಂ. ಸದಸ್ಯ ಗಾಣಕಲ್ ನಟರಾಜು, ಪಕ್ಷದ ಮುಖಂಡ ಇಕ್ಬಾಲ್ ಹುಸೇನ್ ಜೊತೆಗಿದ್ದರು.