ಬೆಂಗಳೂರು: ಶಾಲೆ ಹಾಗೂ ಕಾಲೇಜು ಬಳಿ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು, ನಿಯಮ ಉಲ್ಲಂಘಿಸಿದ್ದ 639 ವಾಹನ ಸವಾರರಿಗೆ ದಂಡ ವಿಧಿಸಿದ್ದಾರೆ.
ಪೂರ್ವ ವಿಭಾಗದ ಕಬ್ಬನ್ ಪಾರ್ಕ್, ಹಲಸೂರು ಗೇಟ್, ಹೈಗ್ರೌಂಡ್ಸ್, ಅಶೋಕನಗರ, ವಿಲ್ಸನ್ ಗಾರ್ಡನ್, ಸದಾಶಿವನಗರ ಹಾಗೂ ಸುತ್ತಮುತ್ತಲಿನ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯಿತು.
‘ಮಕ್ಕಳು ದ್ವಿಚಕ್ರ ವಾಹನ ಹಾಗೂ ಕಾರು ತೆಗೆದುಕೊಂಡು ರಸ್ತೆಗೆ ಬರುತ್ತಿದ್ದಾರೆ. ನಿರ್ಲಕ್ಷ್ಯ ಹಾಗೂ ಅತೀ ವೇಗದಲ್ಲಿ ವಾಹನ ಚಲಾಯಿಸಿ, ಅಪಘಾತಕ್ಕೂ ಕಾರಣವಾಗುತ್ತಿದ್ದಾರೆ. ಇಂಥವರನ್ನು ಪತ್ತೆ ಮಾಡಿ ದಂಡ ವಿಧಿಸುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾರ್ವಜನಿಕರು ದೂರು ನೀಡಿದ್ದರು’ ಎಂದು ಸಂಚಾರ ಪೊಲೀಸ್ ಅಧಿಕಾರಿ ತಿಳಿಸಿದರು.
‘ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಸಂಚಾರ, ಹೆಲ್ಮೆಟ್ ರಹಿತ ಚಾಲನೆ, ದ್ವಿಚಕ್ರ ವಾಹನದಲ್ಲಿ ಮೂರು ಮಂದಿ ಸವಾರಿ ಹಾಗೂ ಪಾದಚಾರಿ ಮಾರ್ಗದಲ್ಲಿ ವಾಹನ ಓಡಾಟ ಸಂಬಂಧ 639 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದರಲ್ಲಿ ಕೆಲವರು, ಮಕ್ಕಳಿದ್ದಾರೆ. ಅವರಿಗೆ ವಾಹನ ನೀಡಿದ್ದಕ್ಕಾಗಿ ಪೋಷಕರಿಗೆ ನೋಟಿಸ್ ನೀಡಲಾಗಿದೆ. ಕೃತ್ಯ ಮರುಕಳಿಸಿದರೆ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ’ ಎಂದು ಹೇಳಿದರು.