ಬೆಂಗಳೂರು: ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಆದೇಶ ಹೊರಡಿಸಿದ್ದು, ಲತಾ ಕುಮಾರಿ ಕೆ.ಎಸ್. ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ದೀರ್ಘ ಕಾಲದಿಂದ ಸ್ಥಳ ನಿರೀಕ್ಷಣೆಯಲ್ಲಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ಕರ್ನಾಟಕ ಗ್ಯಾಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕಿಯನ್ನಾಗಿ ನೇಮಿಸಲಾಗಿದೆ.
ಪ್ರದೀಪ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆ ವಿಭಾಗದ ನಿರ್ದೇಶಕರನ್ನಾಗಿ, ಸಿ.ಎನ್. ಶ್ರೀಧರ ಅವರನ್ನು ಜವಳಿ ಅಭಿವೃದ್ಧಿ ಆಯುಕ್ತ ಮತ್ತು ಕೈಮಗ್ಗ ಹಾಗೂ ಜವಳಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ಸಂಗಪ್ಪ ಅವರನ್ನು ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮದ (ಕಿಯೋನಿಕ್ಸ್) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮತ್ತು ಶ್ರೀರೂಪಾ ಅವರನ್ನು ಕರ್ನಾಟಕ ರಾಜ್ಯ ಖನಿಜ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.