ಬೆಂಗಳೂರು: ನಗರದಲ್ಲಿ ಶನಿವಾರ ರಾತ್ರಿ ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ಅರುಣ್ಕುಮಾರ್ (28) ಹಾಗೂ ಸುಜಿತ್ ಶಾ (32) ಮೃತರು. ಅಪಘಾತಗಳಿಗೆ ಸಂಬಂಧಿಸಿ ಕುಮಾರಸ್ವಾಮಿ ಲೇಔಟ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿವೆ.
‘ಜೆ.ಪಿ. ನಗರ ಬಳಿಯ ಸಾರಕ್ಕಿ ಲೇಔಟ್ ನಿವಾಸಿ ಅರುಣ್ಕುಮಾರ್, ಕಂಪನಿಯೊಂದರಲ್ಲಿ ಲೆಕ್ಕಾಧಿಕಾರಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ 11.30 ಗಂಟೆ ಸುಮಾರಿಗೆ ಬೈಕ್ನಲ್ಲಿ ಅಂಜನಾಪುರದ 80 ಅಡಿ ರಸ್ತೆಯಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು ಹೇಳಿದರು.
‘ಅರುಣ್ ಅವರ ಬೈಕ್ಗೆ ಲಾರಿ ಡಿಕ್ಕಿ ಹೊಡೆದಿತ್ತು. ಬೈಕ್ ಸಮೇತ ಉರುಳಿಬಿದ್ದಿದ್ದ ಅರುಣ್ ತಲೆಗೆ ತೀವ್ರ ಪೆಟ್ಟಾಗಿತ್ತು. ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.
ಬಿಹಾರದ ಕಾರ್ಮಿಕ: ‘ಮೃತ ಸುಜಿತ್ ಶಾ, ಬಿಹಾರದವರು. ಕೆಲಸ ಹುಡುಕಿಕೊಂಡು ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು’ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಹೇಳಿದರು.
‘ಸುಜಿತ್ ಶಾ ಅವರು ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಬೈಕ್ನಲ್ಲಿ ಚಿಕ್ಕ ನಾಗಮಂಗಲ ರಸ್ತೆಯಲ್ಲಿ ಹೊರಟಿದ್ದರು. ಇದೇ ಸಂದರ್ಭದಲ್ಲಿ ಬೈಕ್ಗೆ ಟ್ರಕ್ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಸುಜಿತ್ ಶಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.