ಯಲಹಂಕ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಬಡಜನರ ಜನಜೀವನ ದುಸ್ತರವಾಗಿದೆ. ಕಾಂಗ್ರೆಸ್ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರುವುದೊಂದೇ ಇದಕ್ಕೆ ಪರಿಹಾರವಾಗಿದೆ’ ಎಂದು ಶಾಸಕ ಕೃಷ್ಣಬೈರೇಗೌಡ ಹೇಳಿದರು.
ಬ್ಯಾಟರಾಯನಪುರ ಕ್ಷೇತ್ರದ ದೊಡ್ಡಜಾಲದಲ್ಲಿ ಆಯೋಜಿಸಿದ್ದ ಜಾಲಾ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ’ರಾಜ್ಯದಲ್ಲಿ ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಜ್ವಲಂತ ಸಮಸ್ಯೆಗಳು ಜನರನ್ನು ತೀವ್ರವಾಗಿ ಕಾಡುತ್ತಿವೆ’ ಎಂದರು.
‘ಶೇ40ರಷ್ಟು ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ಸರ್ಕಾರ, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಗಮನಹರಿಸದೆ ಚುನಾವಣೆ ಸಿದ್ಧತೆಯಲ್ಲಿ ತೊಡಗಿದೆ. ಇದರಿಂದ, ಜನರ ಸಂಕಷ್ಟ ಎದುರಿಸುತ್ತಿದ್ದಾರೆ’ ಎಂದು ದೂರಿದರು.
ಜಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ಮಹೇಶ್ ಕುಮಾರ್ ಮಾತನಾಡಿ, ‘ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಸಮಿತಿಗಳನ್ನು ರಚಿಸಲಾಗಿದೆ’ ಎಂದರು.
ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ್, ಕಾಂಗ್ರೆಸ್ ಮುಖಂಡರಾದ ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ದಾನೇಗೌಡ, ಬಿ.ಕೆ.ಮಂಜುನಾಥಗೌಡ, ಕೆ.ಅಶೋಕನ್, ಎಂ.ಹನುಮಂತೇಗೌಡ, ಶುಕೂರ್ ಅಹಮದ್, ಬಿ.ಕೆ.ನಾರಾಯಣಸ್ವಾಮಿ, ಕೋಗಿಲು ವೆಂಕಟೇಶ್ ಇದ್ದರು.