ಯಲಹಂಕ: ‘ಶ್ರೀಮಂತರ ಮೇಲೆ ತೆರಿಗೆವಿಧಿಸಿ, ಆ ಹಣದಲ್ಲಿ ಬಡವರಿಗೆ ಸಹಾಯ ಮಾಡಬೇಕಾದ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ಮೇಲೆ ತೆರಿಗೆ ವಿಧಿಸಿ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ’ ಎಂದು ಶಾಸಕ ಕೃಷ್ಣ ಬೈರೇಗೌಡ ದೂರಿದರು.
ಬ್ಯಾಟರಾಯನಪುರ ಕ್ಷೇತ್ರ ಕಾಂಗ್ರೆಸ್ ಪಕ್ಷದ ವತಿಯಿಂದ ಜಕ್ಕೂರಿನ ಅರ್ಕಾವತಿ ಬಡಾವಣೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಯುಗಾದಿ ಹಬ್ಬದ ಪ್ರಯುಕ್ತ ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.
‘ಕೋವಿಡ್ ಬಿಕ್ಕಟ್ಟಿನ ನಂತರ ಚಾಲಕರು ಹೆಚ್ಚು ತೊಂದರೆಗೆ ಒಳಗಾದರು. ಈಗಲೂ ಅವರಿಗೆ ಹೆಚ್ಚು ನಷ್ಟವಾಗುತ್ತಿದೆ. ಈಗಲೂ ಅವರ ಸ್ಥಿತಿ ಸುಧಾರಿಸುತ್ತಿಲ್ಲ. ಈ ಮದ್ಯೆ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತಿ ಹೆಚ್ಚು ತೆರಿಗೆ ವಿಧಿಸಿದ್ದು, ದುಡಿದ ಹಣವನ್ನೆಲ್ಲ ಇಂಧನ ಖರೀದಿಸಲು ವ್ಯಯಿಸಬೇಕಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
ಆಹಾರ ಕಿಟ್ ವಿತರಣೆ
ಇದಕ್ಕೂ ಮುನ್ನ ದೊಡ್ಡಬೊಮ್ಮಸಂದ್ರದಲ್ಲಿ ದಲಿತ ಸಂಘಟನ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕೃಷ್ಣಬೈರೇಗೌಡ, 200 ಮಂದಿ ಬಡವರಿಗೆ ಆಹಾರದ ಕಿಟ್ ವಿತರಿಸಿದರು.
ಕಾಂಗ್ರೆಸ್ ಮುಖಂಡರಾದ ಆರ್.ಎಂ.ಶ್ರೀನಿವಾಸ್, ಗೋಪಾಲಕೃಷ್ಣ, ರವಿಕುಮಾರ್, ಪಟೇಲ್ ಪಿಳ್ಳೇಗೌಡ, ಮುನಿರಾಜು, ರಮೇಶ್ ಉಪಸ್ಥಿತರಿದ್ದರು.