ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಬ್ಯಾಂಕ್‌ನಿಂದ ₹94 ಕೋಟಿ ದುರ್ಬಳಕೆ’

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಎಂ.ಡಿ. ಸೇರಿ ಆರು ಮಂದಿ ವಿರುದ್ಧ ಎಫ್‌ಐಆರ್‌ ‌
Published 29 ಮೇ 2024, 16:12 IST
Last Updated 29 ಮೇ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬೇರೆ ಬೇರೆ ಬ್ಯಾಂಕ್‌ ಖಾತೆಗಳಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ₹94 ಕೋಟಿ ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪದ ಮೇಲೆ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಸಿಇಒ ಸೇರಿದಂತೆ ಬ್ಯಾಂಕ್‌ನ ಆರು ಮಂದಿ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಮಣಿಮೇಖಲೈ, ಕಾರ್ಯನಿರ್ವಾಹಕ ನಿರ್ದೇಶಕ ನಿತೇಶ್ ರಂಜನ್, ರಾಮಸುಬ್ರಮಣ್ಯಂ, ಸಂಜಯ್‌ರುದ್ರ, ಪಂಕಜ್ ದ್ವಿವೇದಿ ಹಾಗೂ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕಿ ಸುಶಿಚಿತಾ ರಾವ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ನಿಗಮದ ಪ್ರಧಾನ ವ್ಯವಸ್ಥಾಪಕ ಎ.ರಾಜಶೇಖರ್ ಅವರು ನೀಡಿದ ದೂರು ಆಧರಿಸಿ, ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ವಾಲ್ಮೀಕಿ ಅಭಿವೃದ್ಧಿ ನಿಗಮವು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ವಸಂತನಗರದ ಶಾಖೆಯಲ್ಲಿ ಖಾತೆ ತೆರೆದಿತ್ತು. ಇದೇ ಬ್ಯಾಂಕ್‌ನ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಶಾಖೆಗೆ ಫೆಬ್ರುವರಿ 2ರಂದು ಖಾತೆಯನ್ನು ವರ್ಗಾವಣೆ ಮಾಡಿಕೊಳ್ಳಲಾಗಿತ್ತು. ಖಾತೆ ನಿರ್ವಹಣೆ ಮಾಡುವ ಸಂಬಂಧ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಲೆಕ್ಕಾಧಿಕಾರಿಯಿಂದ ಬ್ಯಾಂಕ್‌ ಸಿಬ್ಬಂದಿ ಸಹಿ ಪಡೆದುಕೊಂಡಿದ್ದರು. ಅದಾದ ಮೇಲೆ ಮಾರ್ಚ್ 4ರಂದು ₹25 ಕೋಟಿ, ಮಾರ್ಚ್ 6ರಂದು ₹25 ಕೋಟಿ, ಮಾರ್ಚ್‌ 21ರಂದು ₹44 ಕೋಟಿ, ಮೇ 21ರಂದು ₹50 ಕೋಟಿ ಹಾಗೂ ಮೇ 22ರಂದು ₹33 ಕೋಟಿ ಸೇರಿ ಒಟ್ಟು ನಿಗಮದ ಬ್ಯಾಂಕ್ ಖಾತೆಯಿಂದ ₹187.33 ಕೋಟಿ ಹಣ ವರ್ಗಾವಣೆ ಮಾಡಲಾಗಿತ್ತು. ಈ ನಡುವೆ ಚುನಾವಣಾ ನೀತಿ ಸಂಹಿತೆ ಜಾರಿ ಆಗಿದ್ದರಿಂದ ಬ್ಯಾಂಕ್‌ ಜೊತೆ ನಿಗಮ ಯಾವುದೇ ಪತ್ರ ವ್ಯವಹಾರ ನಡೆಸಿರಲಿಲ್ಲ. ನಿಗಮದ ಅಧಿಕೃತ ವಿಳಾಸಕ್ಕೆ ಪಾಸ್‌ಬುಕ್, ಚೆಕ್‌ಬುಕ್‌ ಸೇರಿ ಯಾವುದೇ ದಾಖಲೆಗಳು ಬ್ಯಾಂಕ್‌ನಿಂದ ಬಂದಿರಲಿಲ್ಲ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ನಿಗಮದ ಯಾವುದೇ ಸಿಬ್ಬಂದಿಯೂ ಹಣವನ್ನು ವಿದ್‌ಡ್ರಾ ಮಾಡಿಲ್ಲ. ಆದರೆ, ನಕಲಿ ದಾಖಲೆ ಸೃಷ್ಟಿಸಿ ₹94.73ಕೋಟಿಯನ್ನು ಅನಧಿಕೃತವಾಗಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಮಾಹಿತಿ ತಿಳಿದ ಮೇಲೆ ಬ್ಯಾಂಕ್‌ ಅಧಿಕಾರಿಗಳನ್ನು ವಿಚಾರಿಸಲಾಯಿತು. ಮೇ 23ರಂದು ₹5 ಕೋಟಿ ಮಾತ್ರ ವಾಪಸ್‌ ಹಾಕಿದ್ದಾರೆ. ಹಣ ವರ್ಗಾವಣೆ ಆಗಿರುವ ಸಂಬಂಧ ಮಾಹಿತಿ ಕೇಳಿದರೂ ಬ್ಯಾಂಕ್‌ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ. ಸಿ.ಸಿ ಟಿವಿ ಕ್ಯಾಮೆರಾದ ದೃಶ್ಯಾವಳಿ ಸಹ ಒದಗಿಸಿಲ್ಲ. ನಿಗಮದ ಇ–ಮೇಲ್‌ಗೆ ಯಾವುದೇ ಸಂದೇಶ ಕಳುಹಿಸಿಲ್ಲ. ಹಣ ಎಲ್ಲಿಗೆ ವರ್ಗಾವಣೆ ಆಗಿದೆ ಎಂಬುದಕ್ಕೆ ಮೊಬೈಲ್‌ ಸಂಖ್ಯೆ ದಾಖಲಿಸಿಲ್ಲ’ ಎಂದು ನಿಗಮದ ಪ್ರಧಾನ ವ್ಯವಸ್ಥಾಪಕರು ದೂರಿನಲ್ಲಿ ತಿಳಿಸಿದ್ದಾರೆ.

‘ದೂರು ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಹಣ ವರ್ಗಾವಣೆ ಆಗಿರುವುದಕ್ಕೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT