ಬೆಂಗಳೂರು: ‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇಲಾಖಾ ಪುನರ್ರಚನೆ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ವರದಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ವಾರ್ತಾಸೌಧದ ಮೂರನೇ ಮಹಡಿಯಲ್ಲಿ ₹3.6 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಹಾತ್ಮ ಗಾಂಧಿ ಮಾಧ್ಯಮ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಸರ್ಕಾರದ ವಿವಿಧ ಇಲಾಖೆಗಳ ಸಾಧನೆಯನ್ನು ಬಿತ್ತರಿಸಲು ವೇದಿಕೆಯಾಗಿರುವ ಈ ಕೇಂದ್ರವನ್ನು ಸದಾ ಚಟುವಟಿಕೆಯ ಕೇಂದ್ರವನ್ನಾಗಿ ರೂಪಿಸಲು ಯತ್ನಿಸುತ್ತೇನೆ’ ಎಂದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರನ್ನು ಸನ್ಮಾನಿಸಲಾಯಿತು.