ಬೆಂಗಳೂರು: ದ್ವಿಚಕ್ರ ವಾಹನ ಕಳ್ಳತನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
‘ರಂಜಿತ್ ಅಲಿಯಾಸ್ ಸಂತು (27) ಹಾಗೂ ಅಜಿತ್ (25) ಬಂಧಿತರು. ಇವರಿಂದ ₹ 6.87 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನ, 9 ಮೊಬೈಲ್ ಹಾಗೂ ಲ್ಯಾಪ್ಟಾಪ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ದೇಶಬಂಧು ನಗರದ ಮನೆಯೊಂದರಲ್ಲಿದ್ದ ಮೊಬೈಲ್ ಹಾಗೂ ಲ್ಯಾಪ್ಟಾಪ್ ಕಳ್ಳತನವಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದರು’ ಎಂದರು.
‘ಅಪರಾಧ ಹಿನ್ನೆಲೆಯುಳ್ಳ ಆರೋಪಿಗಳು, ನಗರದ ಹಲವೆಡೆ ದ್ವಿಚಕ್ರ ವಾಹನಗಳ ಕಳ್ಳತನ ಮಾಡಿದ್ದರು. ಮೊಬೈಲ್, ಲ್ಯಾಪ್ಟಾಪ್ ಸಹ ಕದಿಯುತ್ತಿದ್ದರು. ಕದ್ದ ವಸ್ತುಗಳ ಮಾರಾಟದಿಂದ ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು. ಅದೇ ಹಣವನ್ನು ಮೋಜು–ಮಸ್ತಿಗೆ ಖರ್ಚು ಮಾಡುತ್ತಿದ್ದರು.’
‘ಕೊಡಿಗೇಹಳ್ಳಿ, ಯಶವಂತಪುರ, ನಂದಿನಿ ಲೇಔಟ್ ಹಾಗೂ ಸಂಜಯನಗರ ಠಾಣೆ ವ್ಯಾಪ್ತಿಯಲ್ಲೂ ಆರೋಪಿಗಳು ಕಳ್ಳತನ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.