ಬೆಂಗಳೂರು: ಮನೆ ಮುಂದೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ಇನಾಯತ್ (20) ಎಂಬಾತನನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
‘ತಮಿಳುನಾಡು ಹೊಸೂರಿನ ಇನಾಯತ್, ನಗರಕ್ಕೆ ಬಂದು ವಾಹನ ಕದ್ದುಕೊಂಡು ಪರಾರಿಯಾಗುತ್ತಿದ್ದ. ಆತನಿಂದ ₹ 1.80 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಎಂ.ಸಿ. ಲೇಔಟ್ ಬಳಿ ಮಾ. 25ರಂದು ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಆರೋಪಿ ಕಳವು ಮಾಡಿದ್ದ. ಈ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಕೈಗೊಂಡಾಗ ಆತ ಸಿಕ್ಕಿಬಿದ್ದ.’
‘ಕದ್ದ ವಾಹನಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ, ಅದರಿಂದ ಬಂದ ಹಣವನ್ನು ಐಷಾರಾಮಿ ಜೀವನಕ್ಕೆ ಖರ್ಚು ಮಾಡುತ್ತಿದ್ದ. ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ಆತ 7 ವಾಹನ ಕದ್ದಿದ್ದಾನೆ. ಅದರಲ್ಲಿ 5 ವಾಹನಗಳ ಮಾಲೀಕರು ಪತ್ತೆಯಾಗಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.