ಬೆಂಗಳೂರು: ‘ಪ್ರಚೋದನಕಾರಿ ವಿಡಿಯೊ ಪೋಸ್ಟ್ ಅಪ್ಲೋಡ್ ಮಾಡಿದ್ದ’ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ಬಿಜೆಪಿಯ ಸಾಮಾಜಿಕ ಮಾಧ್ಯಮಗಳ ಸಂಚಾಲಕ ಪ್ರಶಾಂತ್ ಮಾಚಕನೂರು ಅವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ವಿಡಿಯೊ ಪೋಸ್ಟ್ ಪ್ರಕಟಿಸಿದ್ದ ಆರೋಪದಡಿ ಪ್ರಶಾಂತ್ ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ. ಆದರೆ, ತಮಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿರುವುದಾಗಿ ಅವರು ಹೇಳುತ್ತಿದ್ದಾರೆ. ನ್ಯಾಯಾಲಯ ಆದೇಶ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.
‘ಎಕ್ಸ್’ನಲ್ಲಿರುವ ಬಿಜೆಪಿಯ ಅಧಿಕೃತ ಖಾತೆಯಲ್ಲಿ (@ಬಿಜೆಪಿ4ಕರ್ನಾಟಕ) ವಿಡಿಯೊ ಪೋಸ್ಟ್ ಮಾಡಲಾಗಿತ್ತು. ‘ಎಚ್ಚರ... ಎಚ್ಚರ... ಎಚ್ಚರ...’ ಎಂದು ಬರೆದು ಹಲವರ ಬಗ್ಗೆ ತಪ್ಪು ಮಾಹಿತಿ ಹರಿಬಿಡಲಾಗಿತ್ತು. ಸಮಾಜದಲ್ಲಿ ಎರಡು ವರ್ಗಗಳ ನಡುವೆ ದ್ವೇಷವನ್ನುಂಟು ಮಾಡುವ ಹಾಗೂ ವೈಷಮ್ಯ ಮೂಡಿಸುವ ಉದ್ದೇಶದಿಂದ ವಿಡಿಯೊ ಅಪ್ಲೋಡ್ ಮಾಡಿರುವುದಾಗಿ ಆರೋಪಿಸಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ದೂರು ನೀಡಿದ್ದರು’ ಎಂದು ಪೊಲೀಸರು ತಿಳಿಸಿದರು.
‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಬಿಜೆಪಿಯ ಸಾಮಾಜಿಕ ಮಾಧ್ಯಮ ಉಸ್ತುವಾರಿ ಅಮಿತ್ ಮಾಳವೀಯಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ನೋಟಿಸ್ ನೀಡಲಾಗಿದೆ. ಜೊತೆಗೆ, ವಿಡಿಯೊ ಪೋಸ್ಟ್ ತಯಾರಿಸಿದ್ದು ಯಾರು ? ಎಂಬ ಬಗ್ಗೆಯೂ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಹೇಳಿದರು.