ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿ ದಾಖಲೆ ಸಂಗ್ರಹಿಸಿ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಕೊರೊನಾ ನಿರ್ವಹಣೆಗೆ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಮಾಹಿತಿ ಸಂಗ್ರಹಿಸಲು ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ದಾಖಲೆ ಸಂಗ್ರಹಿಸುವ ಹೊಣೆಯನ್ನು ಹಿರಿಯ ಶಾಸಕರಾದ ರಮೇಶ್ ಕುಮಾರ್ ಮತ್ತು ರಾಮಲಿಂಗಾ ರೆಡ್ಡಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಹಿಸಿದ್ದಾರೆ.
ಬೆಂಗಳೂರಿನ ಜವಾಬ್ದಾರಿಯನ್ನು ರಾಮಲಿಂಗಾ ರೆಡ್ಡಿಗೆ ಹಾಗೂ ರಾಜ್ಯದ ಜವಾಬ್ದಾರಿಯನ್ನು ರಮೇಶ್ ಕುಮಾರ್ ಅವರಿಗೆ ವಹಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕೆಪಿಸಿಸಿ ಸಿಬ್ಬಂದಿಗೆ ಕೊರೊನಾ ಪರೀಕ್ಷೆ: ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಅವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿ ಸಿಬ್ಬಂದಿಗೆ ಮಂಗಳವಾರ ಕೊರೊನಾ ಸೋಂಕು ತಪಾಸಣೆ ನಡೆಯಲಿದೆ.
ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೆಪಿಸಿಸಿ ಕಚೇರಿಗೆ ಹಲವು ಭಾರಿ ರಂಗನಾಥ್ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಎಲ್ಲ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.