ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಜಯನಗರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವಾರ್ಡ್ಗಳ ಮರು ವಿಂಗಡಣೆ ಅಧಿಸೂಚನೆ ಪ್ರಶ್ನಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಶಾಸಕರಾದ ಸೌಮ್ಯಾ ರೆಡ್ಡಿ ಮತ್ತು ಬಿ.ಝಡ್. ಜಮೀರ್ ಅಹ್ಮದ್ ಖಾನ್ ಸೇರಿ 10ಕ್ಕೂ ಹೆಚ್ಚು ಪ್ರತ್ಯೇಕ ರಿಟ್ ಅರ್ಜಿಗಳನ್ನುನ್ಯಾಯಮೂರ್ತಿ ಹೇಮಂತ ಚಂದನ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ‘ನಾನು ದೆಹಲಿಯಲಿರುವ ಕಾರಣ ವಾದ ಮಂಡನೆಗೆ ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಈ ಮನವಿಯನ್ನು ಪರಿಗಣಿಸಿದ ನ್ಯಾ ಯಪೀಠ ವಿಚಾರಣೆಯನ್ನು ಶುಕ್ರವಾರಕ್ಕೆ (ಸೆ.09) ಮುಂದೂಡಿತು.
‘ವಾರ್ಡ್ ಮರು ವಿಂಗಡಣೆ ವೇಳೆ ಜನಸಂಖ್ಯೆ ಪ್ರಮಾಣವನ್ನು ಪರಿಗಣಿಸುವಲ್ಲಿ ಸರ್ಕಾರ ತರತಮ ತೋರಿದೆ.ಬಿಬಿಎಂಪಿ ಕಾಯ್ದೆ-2020ರ ಕಲಂ 7 ಅನ್ನು ಉಲ್ಲಂಘಿಸಲಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.