ಬೆಂಗಳೂರು: ‘ನೀರಿನ ಸಂರಕ್ಷಣೆ’ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶೇಷಾದ್ರಿಪುರ ಕಾಲೇಜು ಹಾಗೂ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ‘ಬೆಂಗಳೂರಿನಿಂದ ಮೈಸೂರಿನವರೆಗೆ ಸೈಕಲ್ ಜಾಥಾ’ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಸೋಮವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿ, ‘ನೀರಿನ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಬೆಂಗಳೂರು ನಗರವನ್ನು ಆಯ್ಕೆ ಮಾಡಲಾಗಿದೆ.ನೀರಿನ ಅನಿವಾರ್ಯತೆ ಹಾಗೂ ಹನಿ ನೀರು ಶೇಖರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಉದ್ದೇಶ’ ಎಂದರು.
ಕರ್ನಾಟಕ ಗಾಂಧಿ ಸ್ಮಾರಕ ಅಧ್ಯಕ್ಷ ವೂಡೇ ಪಿ.ಕೃಷ್ಣ, ‘ಜಲ ಸಂಪನ್ಮೂಲವನ್ನು ಮುಂದಿನ ಪೀಳಿಗೆಗೆ ಉಳಿಸಬೇಕು. ಈ ನಿಟ್ಟಿನಲ್ಲಿ ಸೈಕಲ್ ಜಾಥಾ ಸಾಮಾಜಿಕ ಸಂದೇಶವನ್ನು ಹೊತ್ತು ಜನರಲ್ಲಿ ನೀರಿನ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲಿದೆ’ ಎಂದರು.
ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ರಾಜ್ಯ ಸಂಪರ್ಕಾಧಿಕಾರಿ ಗಣನಾಥ ಶೆಟ್ಟಿ ಎಕ್ಕಾರು, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಕಾರಿ ಗೋವಿಂದೇಗೌಡ, ಆಡಳಿತ ಸಲಹಾ ಮಂಡಳಿ ಅಧ್ಯಕ್ಷ ಎಂ.ಎಸ್.ನಟರಾಜ್, ಪ್ರಾಂಶುಪಾಲ ಅನುರಾಧ ರಾಯ್ ಭಾಗವಹಿಸಿದ್ದರು.