ಬೆಂಗಳೂರು: ವರದಕ್ಷಿಣೆ ತರುವಂತೆ ಪೀಡಿಸಿ ಪತ್ನಿಗೆ ದೈಹಿಕ ಕಿರುಕುಳ ನೀಡಿರುವ ಆರೋಪದಡಿ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಡಾ. ಆಕಾಶ್ ವಿರುದ್ಧ ನಗರದ ಪೂರ್ವ ವಿಭಾಗ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ಡಾ. ವಂದನಾ ಅವರು ಇತ್ತೀಚೆಗೆ ದೂರು ನೀಡಿದ್ದಾರೆ. ಐಎಎಸ್ ಅಧಿಕಾರಿ ಆಕಾಶ್, ಅವರ ತಂದೆ–ತಾಯಿ ಹಾಗೂ ಸಹೋದರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ನಿವೃತ್ತ ಡಿಐಜಿ ಟಿ.ಎಸ್. ಸುರೇಶ್ ಪುತ್ರಿಯಾದ ವಂದನಾ ಹಾಗೂಆಕಾಶ್, 2022ರಲ್ಲಿ ಮದುವೆಯಾಗಿದ್ದಾರೆ. ಐಎಎಸ್ ಅಧಿಕಾರಿ ಎಂಬುದಾಗಿಹೇಳುವ ಆಕಾಶ್, ಹೆಚ್ಚು ವರದಕ್ಷಿಣೆ ತರುವಂತೆ ಪತ್ನಿಗೆ ಪೀಡಿಸುತ್ತಿದ್ದಾರೆ. ಅದಕ್ಕೆ ಒಪ್ಪದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ ಮಾಡಿರುವ ಆರೋಪವಿದೆ’ ಎಂದು ಮೂಲಗಳು ತಿಳಿಸಿವೆ.