ಕಳೆದ 40 ವರ್ಷಗಳಿಂದಲೂ ಕ್ಷೇತ್ರದಲ್ಲಿದ್ದುಕೊಂಡು, ಜನರ ಒಡನಾಟದಲ್ಲಿದ್ದೇನೆ. ಕ್ಷೇತ್ರದ ಜನರ ಜತೆ ನಿಕಟ ಸಂಪರ್ಕದಲ್ಲಿದ್ದು, ಎಲ್ಲರಿಗೂ ಲಭ್ಯವಾಗುತ್ತೇನೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಜಿಲ್ಲಾ ಪಂಚಾಯಿತಿ ಸದಸ್ಯ, ಶಾಸಕನಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಬಾಕಿ ಉಳಿದಿರುವ ಕಾರ್ಯಗಳನ್ನು ಏನೇನು ಎನ್ನುವುದು ಸಹ ನನಗೆ ಚೆನ್ನಾಗಿ ಗೊತ್ತಿದೆ. ಅವುಗಳನ್ನು ಮುಂದಿನ ಅವಧಿಯಲ್ಲಿ ಕೈಗೊಳ್ಳುವ ಆಶಾಭಾವ ಹೊಂದಿದ್ದೇನೆ. ಹೀಗಾಗಿ, ಕ್ಷೇತ್ರದ ಸಂಪೂರ್ಣ ನಾಡಿಮಿಡಿತ ನನಗೆ ಗೊತ್ತಿದೆ. ಜಲ ಜೀವನ್ ಮಿಷನ್ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮಕೈಗೊಳ್ಳಲಾಗಿದ್ದು, ಮನೆ, ಮನೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ವಸತಿ ರಹಿತರಿಗೆ ಮನೆ ನೀಡಲಾಗಿದೆ. ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಭೂಸ್ವಾಧೀನ ವಿಷಯದಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗಿತ್ತು. ಈ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಟ್ಟು ಗೊಂದಲಗಳನ್ನು ಪರಿಹರಿಸಿದ್ದೇನೆ. ರೈತರಿಗೆ ಅನ್ಯಾಯವಾಗದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೆಣ್ಣು ಮಕ್ಕಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಕ್ರಮಕೈಗೊಳ್ಳಲಾಗಿದೆ. ಕ್ಷೇತ್ರದಲ್ಲಿನ ಎಲ್ಲ ವರ್ಗದ ಮತ್ತು ಪ್ರದೇಶಗಳ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಿರುವ ತೃಪ್ತಿ ಇದೆ.