ಬೆಂಗಳೂರು: ಮೈಸೂರಿನಲ್ಲಿ ಆಯೋಜಿಸಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶ ಸೇರಿದಂತೆ ಸೋಮವಾರ ನಡೆಯುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ವಜುಭಾಯ್ ವಾಲಾ ಅವರು ಮೈಸೂರಿನ ವಿಮಾನನಿಲ್ದಾಣದಲ್ಲಿ ಭಾನುವಾರ ರಾತ್ರಿ ಸ್ವಾಗತ ಕೋರಿದರು.
ಪ್ರಧಾನಿಗೆ ಗುಲಾಬಿ ಹೂವು ನೀಡಿ, ರೇಷ್ಮೆ ದಡಿಯ ಬಿಳಿಯಶಲ್ಯ ಹಾಕಿ, ಹಸ್ತ ಲಾಘವ ಮಾಡಿ ಸಿಎಂ ಸ್ವಾಗತಿಸಿದರು.
‘ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಳ್ಳಲಾಯಿತು’ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರೂ ಸಹ ಪ್ರಧಾನಿಗೆ ಸ್ವಾಗತಿಸಿದರು.