ಹೊಸಕೋಟೆ: ತಾಲ್ಲೂಕಿನಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಸರ್ಕಾರ 2 ಕೋಟಿ ರೂಪಾಯಿ ಮಂಜೂರಾತಿ ನೀಡಿದೆ ಎಂದು ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು. ತಾಲ್ಲೂಕು ಆಡಳಿತ ಹಾಗೂ ಪ್ರಗತಿಪರ ದಲಿತ ಸಂಘಟನೆಗಳ ಆಶ್ರಯದಲ್ಲಿ ಗುರುವಾರ ಇಲ್ಲಿ ಹಮ್ಮಿಕೊಂಡಿದ್ದ ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕು ಕಚೇರಿ ಆವರಣದಲ್ಲಿ ಶೀಘ್ರದಲ್ಲೇ ಅಂಬೇಡ್ಕರ್ ಅವರ ಪುತ್ಥಳಿಯನ್ನು ನಿರ್ಮಿಸಲಾಗುವುದು ಎಂದು ಭರವಸೆ ನೀಡಿದ ಸಚಿವರು, 20 ಕೋಟಿ ರೂ ವೆಚ್ಚದಲ್ಲಿ ಸರ್ಕಾರ ರಾಜ್ಯದ 28 ತಾಲ್ಲೂಕುಗಳಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು. ಅಂಬೇಡ್ಕರ್ ಸಮಾಜದಲ್ಲಿನ ಅಸಮಾನತೆಯ ವಿರುದ್ಧ ಹೋರಾಟ ಮಾಡಿದ ಮಹಾನ್ ನಾಯಕ ಎಂದು ಬಣ್ಣಿಸಿದ ಸಚಿವರು, ಅವರ ಆದರ್ಶ, ತತ್ವಗಳನ್ನು ಜೀವನದಲ್ಲಿ ಅಳವಡಿಕೊಳ್ಳುವಂತೆ ಕರೆ ನೀಡಿದರು.
ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿ ರಾಷ್ಟ್ರ ಘಟಕದ ಅಧ್ಯಕ್ಷ ಚಿ.ನಾ.ರಾಮು, ಜಿ.ಪಂ.ಸದಸ್ಯ ತಿರುವರಂಗ ನಾರಾಯಣಸ್ವಾಮಿ, ಉಪನ್ಯಾಸಕ ಡಾ. ಸಿ.ಜಿ.ಲಕ್ಷ್ಮೆಪತಿ ಮಾತನಾಡಿದರು. ಪುರಸಭೆ ಅಧ್ಯಕ್ಷ ಸಿ.ರಾಜಣ್ಣ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಅಧ್ಯಕ್ಷ ಟಿ.ಎಸ್.ರಾಜಶೇಖರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಸಿ.ಮುನಿಯಪ್ಪ ಮತ್ತಿತರರು ಉಪಸ್ಥಿತರಿದ್ದರು. ತಹಶೀಲ್ದಾರ್ ದಯಾನಂದ ಭಂಡಾರಿ ಸ್ವಾಗತಿಸಿದರು. ಇದಕ್ಕೆ ಮುಂಚೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ಅಂಬೇಡ್ಕರ್ ಮತ್ತು ಜಗಜೀವನರಾಂ ಅವರ ಭಾವಚಿತ್ರಗಳ ಮೆರವಣಿಗೆ ನಡೆಯಿತು.