ಯಲಹಂಕ: ಸರ್ಕಾರದಿಂದ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಯಶಸ್ವಿಯಾಗಲು ಸಾರ್ವಜನಿಕ ಸಹಕಾರ ಅತ್ಯಗತ್ಯ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.
ಯಲಹಂಕ ಉಪ ವಲಯದಲ್ಲಿ ಬೆಂಗಳೂರು ಜಲಮಂಡಳಿ ವತಿಯಿಂದ ಕೈಗೆತ್ತಿಕೊಂಡಿರುವ ಒಳಚರಂಡಿ ವ್ಯವಸ್ಥೆ ಅಳವಡಿಸುವ ಕಾಮಗಾರಿಗೆ ಕೆರೆಕೋಡಿ ಬಳಿ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, `ಕಾಮಗಾರಿ ಆರಂಭವಾದ ನಂತರ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದನ್ನು ಸಹಿಸಿಕೊಳ್ಳುವ ಮೂಲಕ ಯೋಜನೆಯ ಅನುಷ್ಠಾನಕ್ಕೆ ಸಂಪೂರ್ಣ ಸಹಕಾರ ನೀಡಬೇಕು~ ಎಂದು ಮನವಿ ಮಾಡಿದರು.
ಬೆಂಗಳೂರು ಜಲಮಂಡಳಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುಟ್ಟಮಲ್ಲಪ್ಪ ಮಾತನಾಡಿ, ಕೇಂದ್ರ ಸರ್ಕಾರದ ಜವಹರಲಾಲ ನೆಹರು ನಗರ ಪುನರುಜ್ಜೀವನ ಯೋಜನೆ ಮತ್ತು ವಿಶ್ವಬ್ಯಾಂಕ್ ನೆರವಿನಿಂದ 28 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, 24 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಡಾ.ಗೀತಾ ಶಶಿಕುಮಾರ್, ಬಿಬಿಎಂಪಿ ಸದಸ್ಯರಾದ ಕೆ.ವಿ.ಯಶೋಧಾ ರವಿಶಂಕರ್, ವೈ.ಎನ್.ಅಶ್ವಥ್, ಎಂ. ಮುನಿರಾಜು, ಜಲಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾರಾಯಣರೆಡ್ಡಿ, ಬಿಜೆಪಿ ಮುಖಂಡರಾದ ಕೆಂಪೇಗೌಡ, ಮೂರ್ತಿ ಕೂರ್ಲಪ್ಪ, ಡಾ.ಶಶಿಕುಮಾರ್, ರಾಮಲಿಂಗೇಗೌಡ ಇತರರು ಉಪಸ್ಥಿತರಿದ್ದರು.