ಬೆಂಗಳೂರು: ಅಲ್ಪಸಂಖ್ಯಾತರ ಸಬಲೀಕರಣಕ್ಕೆ ರಾಜಕೀಯ ಮೀಸಲಾತಿ ಕಲ್ಪಿಸುವ ಅಗತ್ಯವಿದೆ ಎಂದು ಎಐಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಖುರ್ಷಿದ್ ಅಹ್ಮದ್ ಸಯ್ಯದ್ ಪ್ರತಿಪಾದಿಸಿದರು.
ನಗರದಲ್ಲಿ ಭಾನುವಾರ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಪದಾಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಅಲ್ಪಸಂಖ್ಯಾತರಿಗೆ ರಾಜಕೀಯ ಮೀಸಲಾತಿ ಕಲ್ಪಿಸಲು ಸಂವಿಧಾನದಲ್ಲಿ ಅವಕಾಶವಿಲ್ಲ. ಇದಕ್ಕಾಗಿ ಸಂವಿಧಾನಕ್ಕೂ ತಿದ್ದುಪಡಿ ಮಾಡಬೇಕಾಗುತ್ತದೆ. ಆದ್ದರಿಂದ ರಾಜಕೀಯ ಪಕ್ಷಗಳು ಸ್ವಯಂಪ್ರೇರಣೆಯಿಂದ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಬೇಕು. ಈ ಕಾರ್ಯ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸಲು ಸಮಾಲೋಚನೆಗಳು ನಡೆಯುತ್ತಿವೆ. ಶೈಕ್ಷಣಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಅಲ್ಪಸಂಖ್ಯಾತರು ಸಬಲರಾಗಬೇಕು. ಈ ನಿಟ್ಟಿನಲ್ಲಿ ರೂಪಿಸಬೇಕಾದ ಕಾರ್ಯಕ್ರಮಗಳ ಬಗ್ಗೆಯೂ ವ್ಯಾಪಕ ಸಮಾಲೋಚನೆ ನಡೆಸಲಾಗುತ್ತದೆ ಎಂದರು.
ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಕುರಿತ ಅಭಿಪ್ರಾಯಗಳನ್ನು ಕ್ರೋಢಿಕರಿಸಿ ಪ್ರಣಾಳಿಕೆ ಸಮಿತಿಗೆ ವರದಿ ಸಲ್ಲಿಸಲಾ ಗುವುದು. ಅದನ್ನು ಪರಿಶೀಲಿಸಿದ ಬಳಿಕ ಸಮಿತಿಯು ಪ್ರಣಾಳಿಕೆಗಳಲ್ಲಿ ಪ್ರಮುಖ ವಿಷಯಗಳನ್ನು ಅಳವಡಿಸಿಕೊಳ್ಳುತ್ತದೆ ಎಂದು ವಿವರಿಸಿದರು.
ಮೀಸಲಾತಿ ನೀಡಲು ರಾಜ್ಯಗಳಿಗೆ ಸಲಹೆ
‘ಸ್ಥಳೀಯ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತರಿಗೂ ಮೀಸಲಾತಿ ಕಲ್ಪಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಸಲಹೆ ನೀಡಲಾಗಿದೆ’ ಎಂದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕೆ.ರೆಹಮಾನ್ ಖಾನ್ ತಿಳಿಸಿದರು.