ಯಲಹಂಕ: ಇಲ್ಲಿನ ಉಪನಗರದಲ್ಲಿ ನವಚೇತನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವನ್ನು ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಭಾನುವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಚಿಕಿತ್ಸೆಗೆಂದು ಆಸ್ಪತ್ರೆಗೆ ಬರುವ ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುವ ಮೂಲಕ ನಿಸ್ವಾರ್ಥ ಸೇವೆಯನ್ನು ಮಾಡಬೇಕು. ರೋಗಿಗಳನ್ನು ಪ್ರೀತಿ, ವಿಶ್ವಾಸದಿಂದ ಆರೈಕೆ ಮಾಡುವ ಮೂಲಕ ಅವರ ಬಹುತೇಕ ಕಾಯಿಲೆಗಳನ್ನು ಗುಣಪಡಿಸಬಹುದಾಗಿದೆ ಎಂದು ಸಲಹೆ ನೀಡಿದರು.
ಕೃಷಿ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಇಲ್ಲಿನ ಜನರು ಈ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗಳಿಗೆ ತೆರಳಬೇಕಾದ ಪರಿಸ್ಥಿತಿಯಿದ್ದುದರಿಂದ ಈ ಭಾಗದಲ್ಲಿ ವಿಶೇಷ ಸೌಲಭ್ಯಗಳುಳ್ಳ ಆಸ್ಪತ್ರೆಯ ಅವಶ್ಯಕತೆಯಿತ್ತು. ಅದರಂತೆ ನೂತನವಾಗಿ ಆರಂಭವಾಗಿರುವ ಈ ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ರೋಗಿಗಳಿಗೆ ಉತ್ತಮ ಆರೋಗ್ಯಸೇವೆ ದೊರೆಯುವಂತಾಗಲಿ ಎಂದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಆರ್.ಉಮಾಶಂಕರ್ ಪ್ರತಿಕ್ರಿಯಿಸಿ, ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನಿಂಗ್, ಅಪಘಾತ ತುರ್ತು ಚಿಕಿತ್ಸಾ ವಿಭಾಗ, ಫಾರ್ಮಸಿ, ಕ್ಷ–ಕಿರಣ, ಸಂಶೋಧನಾ ಕೇಂದ್ರ, ಎನ್ಐಸಿಯು, ಐಸಿಯು ಘಟಕಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿವೆ ಎಂದರು.
ವಿಶೇಷ ಸೌಲಭ್ಯಗಳಿರುವ ಇತರೆ ಆಸ್ಪತ್ರೆಗಳಿಗೆ ಹೋಲಿಸಿದರೆ ನಮ್ಮ ಆಸ್ಪತ್ರೆಯಲ್ಲಿ ಕಡಿಮೆ ವೆಚ್ಚದಲ್ಲಿ ಎಲ್ಲ ವರ್ಗದ ಜನರಿಗೂ ಅನುಕೂಲ ವಾಗುವ ರೀತಿಯಲ್ಲಿ ಚಿಕಿತ್ಸೆ ನೀಡಲಾಗುವುದು. ಭವಿಷ್ಯದಲ್ಲಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಬಡಜನರಿಗೆ ಒಳ್ಳೆಯ ಆರೋಗ್ಯಸೇವೆ ನೀಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.