ಬೆಂಗಳೂರು: ನಗರದ ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡುವ ಸಲುವಾಗಿ ಉಪ ನಗರ ರೈಲು ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಆಗ್ರಹಿಸಿ ಬೆಂಗಳೂರು ಉಪ ನಗರ ರೈಲು ಪ್ರಯಾಣಿಕರ ಸಂಘ ವೈಟ್ಫೀಲ್ಡ್ ರೈಲು ನಿಲ್ದಾಣದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
ಉಪನಗರ ರೈಲುಗಳಿಗಾಗಿ ಆಗ್ರಹಿಸಿ ಕಳೆದ 8–10 ವರ್ಷಗಳಿಂದ ರೈಲ್ವೆ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
2011ರಲ್ಲಿ ‘ರೈಟ್ಸ್’ ಸಂಸ್ಥೆ ಸಿದ್ಧಪಡಿ
ಸಿದ್ದ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಆ ಪ್ರಸ್ತಾವಕ್ಕೆ ಈವರೆಗೆ ಒಪ್ಪಿಗೆ ದೊರೆತಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ನೀಡಿ, ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಸ್ತುತ ಬಂಗಾರಪೇಟೆ, ರಾಮನಗರ ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ ಮತ್ತು ಹೊಸೂರು ನಗರಗಳಿಗೆ ಉಪನಗರ ರೈಲುಗಳು ಇದ್ದರೂ ಸರಿಯಾದ ಸಮಯಕ್ಕೆ ಬರುತ್ತಿಲ್ಲ.
ಅಸ್ತಿತ್ವದಲ್ಲಿರುವ ಮಾರ್ಗಗಳಲ್ಲಿ ಮತ್ತು ಇತರೆ ನಗರಗಳಿಗೂ ಹೆಚ್ಚಿನ ರೈಲುಗಳ ಸಂಚಾರ ಕಲ್ಪಿಸಬೇಕು ಎಂದರು.
ಸಂಘದ ಅಧ್ಯಕ್ಷ ಸತೀಂದ್ರ ಚೋಪ್ರಾ, ಉಪಾಧ್ಯಕ್ಷ ಕೃಷ್ಣಪ್ರಸಾದ್, ಕಾರ್ಯದರ್ಶಿ ತಿಮ್ಮದಾಸ್ ಪ್ರಕಾಶ್ ಅವರು ಪ್ರತಿಭಟನೆಯ ನಂತರ ವೈಟ್ಫೀಲ್ಡ್ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ಅವರಿಗೆ ಮನವಿ ಸಲ್ಲಿಸಿದರು.