ಬೆಂಗಳೂರು: `ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಎಂಜಿನಿಯರುಗಳ ಕೊರತೆಯಿಂದಾಗಿ ಯೋಜನೆಗಳ ಅನುಷ್ಠಾನ ತಡವಾಗುತ್ತಿದ್ದ ಕಾರಣ ಸದ್ಯ 40 ಎಲೆಕ್ಟ್ರಾನಿಕ್, ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್ಗಳ ನೇಮಕ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ~ ಎಂದು ನಗರಾಭಿವೃದ್ಧಿ ಸಚಿವ ಎಸ್.ಸುರೇಶ್ಕುಮಾರ್ ಹೇಳಿದರು.
ನಗರದಲ್ಲಿ ಶುಕ್ರವಾರ ರಾಜ್ಯದ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ನಡೆದ ಜಲಮಂಡಳಿಯ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ಪ್ರಕಟಿಸಿದ ಅವರು, `ಎಂಜಿನಿಯರ್ಗಳ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು ಈ ಸಂಬಂಧ ಸದ್ಯದಲ್ಲಿಯೇ ಆದೇಶ ನೀಡಲಾಗುವುದು~ ಎಂದರು.
`ಬೇಸಿಗೆಯ ದಿನಗಳು ಸಮೀಪಿಸುತ್ತಿದ್ದು ರಾಜ್ಯದ ಅನೇಕ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಬಗ್ಗೆ ಸಾಕಷ್ಟು ಆತಂಕವಿದೆ. ಮಂಡಳಿ ಈ ಸನ್ನಿವೇಶವನ್ನು ಎದುರಿಸಲು ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಬೇಕು. ಜಲಸಂಗ್ರಹ, ಟ್ಯಾಂಕರ್ ಮೂಲಕ ನೀರು ಒದಗಿಸುವುದು ಸೇರಿದಂತೆ ನಿಯಮಿತ ಹಂಚಿಕೆ ವ್ಯವಸ್ಥೆಯನ್ನು ರೂಪಿಸಬೇಕು. ಅಗತ್ಯವಿರುವ ಕಡೆ ಮತ್ತು ನೀರಿನ ಲಭ್ಯತೆ ಅನುಸರಿಸಿ ಹೊಸದಾಗಿ ಬೋರ್ವೆಲ್ ಹಾಕಿಸುವುದೂ ಸೇರಿದಂತೆ ನೀರಿನ ಸಮಸ್ಯೆಗಳ ಬಗ್ಗೆ ಮಂಡಳಿಯ ಅಧಿಕಾರಿಗಳು ಕೂಡಲೇ ಗಮನಹರಿಸಬೇಕು. ಈ ಬಗ್ಗೆ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಜಿನಿಯರ್ಗಳು ಸೂಕ್ತ ಸಿದ್ದತೆ ಮಾಡಿಕೊಳ್ಳಬೇಕು~ ಎಂದು ಅವರು ಆದೇಶ ನೀಡಿದರು.