ಬೆಂಗಳೂರು: ಕಮರ್ಷಿಯಲ್ ಸ್ಟ್ರೀಟ್ನಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ಅಳವಡಿಸಿರುವ ಇಂಗ್ಲಿಷ್ ನಾಮಫಲಕಗಳನ್ನು ಬಿಬಿಎಂಪಿ ಮಂಗಳವಾರ ತೆರವುಗೊಳಿಸಿತು.
ಯಾವುದೇ ಸೂಚನೆ ನೀಡದೆ ಪಾಲಿಕೆ ನಾಮಫಲಕಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಮಳಿಗೆಗಳ ಮಾಲೀಕರು ದೂರಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳುತ್ತಿರುವುದಾಗಿ ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು. ಜೆಸಿಬಿ ಸಹಾಯದಿಂದ ನಾಮಫಲಕಗಳನ್ನು ತೆರವುಗೊಳಿಸಲಾಯಿತು. ಅವುಗಳನ್ನು ತುಂಬಿಕೊಂಡು ಹೋಗಲು ಲಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ
ದ್ದವು. ಇದರಿಂದ ಈ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.
‘ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಭಾಷೆ ಬಳಸುವಂತೆ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಸೂಚನೆ ನೀಡಲಾಗಿತ್ತು. ಆದರೂ ಕನ್ನಡಕ್ಕೆ ಆದ್ಯತೆ ನೀಡಿರಲಿಲ್ಲ’ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದರು.
‘ಈ ಸಂಬಂಧ ಪಾಲಿಕೆಯಿಂದ ನಮಗೆ ಸೂಚನೆ ಬಂದಿಲ್ಲ. ಬಿಬಿಎಂಪಿ ಆಯುಕ್ತರನ್ನು ಬುಧವಾರ ಭೇಟಿಯಾಗಿ ಚರ್ಚಿಸುತ್ತೇವೆ’ ಎಂದು ಕಮರ್ಷಿಯಲ್ ಸ್ಟೀಟ್ನ ಮಳಿಗೆ ಮಾಲೀಕರ ಸಂಘದ ಅಧ್ಯಕ್ಷ ಅಶೋಕ್ ಮೊತ್ವಾನಿ ಹೇಳಿದರು.
‘ಮಳಿಗೆಗೆ ಬರುವ ಎಲ್ಲ ಗ್ರಾಹಕರಿಗೂ ಕನ್ನಡ ಭಾಷೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇಂಗ್ಲಿಷ್ ಭಾಷೆಯೂ ಅಗತ್ಯ’ ಎಂದು ಅವರು ತಿಳಿಸಿದರು.
‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶನವನ್ನು ಪಾಲಿಸುತ್ತಿದ್ದೇವೆ. ಮಳಿಗೆಗಳ ಮಾಲೀಕರು ನಿಯಮಗಳನ್ನು ಪಾಲಿಸದಿದ್ದರೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಮೇಯರ್ ಆರ್.ಸಂಪತ್ ರಾಜ್ ಎಚ್ಚರಿಕೆ ನೀಡಿದರು.
ವಾಣಿಜ್ಯ ಪರವಾನಗಿ ರದ್ದತಿಗೆ ಸೂಚನೆ: ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಅನುಷ್ಠಾನದ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯ ಜುಲೈ 18ರಂದು ಸಭೆ ನಡೆಸಿದ್ದರು.
ಎಲ್ಲ ಅಂಗಡಿಮುಂಗಟ್ಟು, ಶಾಪಿಂಗ್ ಮಾಲ್, ವಾಣಿಜ್ಯ ಕಟ್ಟಡಗಳು ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕು. ನಾಮಫಲಕ
ದಲ್ಲಿ ಶೇ 60ರಷ್ಟು ಕನ್ನಡಕ್ಕೆ ಆದ್ಯತೆ ಇರಬೇಕು. ಶೇ 40ರಷ್ಟು ಅನ್ಯ ಭಾಷೆ ಬಳಸಬಹುದು. ಆದೇಶ ಪಾಲಿಸದಿದ್ದರೆ ವಾಣಿಜ್ಯ ಪರವಾನಗಿ ರದ್ದುಪಡಿಸುವಂತೆ ಅವರು ಸೂಚಿಸಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.