ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರ ಬಲ ಕಣ್ಣಿನಲ್ಲಿ ದೃಷ್ಟಿ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯ ಮಧುಮೇಹ ಸಂಸ್ಥೆಯಲ್ಲಿ ಚಿಕಿತ್ಸೆ ಕೊಡಿಸಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಅಧಿಕಾರಿಗಳು ನಿರ್ಧರಿಸಿದ್ದಾರೆ.
`ಮಧುಮೇಹದಿಂದ ಬಳಲುತ್ತಿರುವ ಕೃಷ್ಣಯ್ಯ ಶೆಟ್ಟಿ ಅವರ ಎಡಗಣ್ಣಿನಲ್ಲಿ ಮೊದಲಿನಿಂದಲೂ ದೃಷ್ಟಿ ದೋಷವಿತ್ತು. ಅವರು ಜೈಲಿಗೆ ಬಂದ ನಂತರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಿದೆ. ಇದರಿಂದ ಅವರ ಬಲಗಣ್ಣಿನಲ್ಲೂ ದೋಷ ಕಾಣಿಸಿಕೊಂಡಿದೆ. ಆದ್ದರಿಂದ ಅವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸುವಂತೆ ಜೈಲು ಆಸ್ಪತ್ರೆ ವೈದ್ಯರು ಸಲಹೆ ನೀಡಿದ್ದಾರೆ~ ಎಂದು ಕಾರಾಗೃಹ ಅಧಿಕಾರಿಗಳು `ಪ್ರಜಾವಾಣಿ~ ಗೆ ತಿಳಿಸಿದರು.
ಜೈಲು ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಕೃಷ್ಣಯ್ಯ ಅವರಿಗೆ ರಾಜ್ಯ ಮಧುಮೇಹ ಸಂಸ್ಥೆಯಲ್ಲಿ ಚಿಕಿತ್ಸೆ ಕೊಡಿಸಲು ನಿರ್ಧರಿಸಲಾಗಿದೆ. ಸದ್ಯದಲ್ಲೇ ಅವರನ್ನು ಆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.