ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಠಾಣೆ ಸಮೀಪದ ಖಾಲಿ ಪ್ರದೇಶದಲ್ಲಿ ಸಂಗ್ರಹಿಸಿದ್ದ ಗುಜರಿ ವಸ್ತುಗಳಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಹೋಗಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಪ್ಲಾಸ್ಟಿಕ್ ವಸ್ತುಗಳು, ರಟ್ಟು ಮತ್ತಿತರ ಗುಜರಿ ವಸ್ತುಗಳನ್ನು ವ್ಯಕ್ತಿಯೊಬ್ಬರು ಖಾಲಿ ಪ್ರದೇಶದಲ್ಲಿ ದಾಸ್ತಾನು ಮಾಡಿದ್ದರು. ಆ ವಸ್ತುಗಳಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಬರಲಾರಂಭಿಸಿತು. ಇದನ್ನು ನೋಡಿದ ಸ್ಥಳೀಯರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿ ವಿಷಯ ತಿಳಿಸಿದರು. ನಾಲ್ಕು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಒಂದು ತಾಸಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು ಎಂದು ಬ್ಯಾಟರಾಯನಪುರ ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳದ ಅಕ್ಕಪಕ್ಕದಲ್ಲೇ ಇರುವ ಮನೆಗಳಿಗೂ ಬೆಂಕಿ ವ್ಯಾಪಿಸುವ ಸಾಧ್ಯತೆ ಇತ್ತು. ಇದರಿಂದಾಗಿ ಸ್ಥಳೀಯರು ಆತಂಕಗೊಂಡಿದ್ದರು. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು ಎಂದು ಪೊಲೀಸರು ಹೇಳಿದ್ದಾರೆ.