ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ಅಕ್ರಮ ಎಸಗುವ ಅಧಿಕಾರಿಗಳ ವಿರುದ್ಧ ನಿರ್ದಾ ಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥ ಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಗುರುವಾರ ವಿಧಾನಪರಿಷತ್ತಿಗೆ ತಿಳಿಸಿದರು.
ಹೆಚ್ಚುವರಿ ಶಿಕ್ಷಕರನ್ನು ಬೇಕಾಬಿಟ್ಟಿವರ್ಗಾವಣೆ ಮಾಡುವುದರಿಂದ ಆಗುತ್ತಿರುವ ಸಮಸ್ಯೆಗಳನ್ನು ನಿಯಮ 330ರ ಅಡಿಯಲ್ಲಿ ಜೆಡಿಎಸ್ನ ಬಸವರಾಜ ಹೊರಟ್ಟಿ ಅವರು ಪ್ರಸ್ತಾಪಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ‘ಮೂರೂವರೆ ವರ್ಷಗಳಿಂದ ಶಿಕ್ಷಕರ ಮರು ನಿಯೋಜನೆ ಪ್ರಕ್ರಿಯೆ ನಡೆಸಿಲ್ಲ. ಇದರಿಂದ ತೊಂದರೆಯಾಗುತ್ತಿದೆ. ಈ ವಿಚಾರದಲ್ಲಿ ಕಠಿಣ ನಿರ್ಧಾರ ಕೈಗೊಳ್ಳುವವರೆಗೆ ಇಲಾಖೆ ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.
‘2009ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಪ್ಪಿ ಕೊಂಡಿದ್ದರಿಂದ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಈ ಬಗ್ಗೆ ನಾವೆಲ್ಲರೂ ಕುಳಿತು ಕೂಲ ಂಕಷವಾಗಿ ಚರ್ಚಿಸಬೇಕಾಗಿದೆ’ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು, ಇದೊಂದು ಸಂಕೀರ್ಣ ವಿಷಯವಾಗಿದ್ದು, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪ್ರತ್ಯೇಕ ವೇದಿಕೆಯಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆಯಬೇಕು. ಅಧಿವೇಶನ ಮುಗಿದ ಕೂಡಲೇ ಈ ಬಗ್ಗೆ ಪರಿಷತ್ತಿನ ಕೆಲವು ಸದಸ್ಯರ ಜೊತೆ ಮಾತುಕತೆ ನಡೆಸುವಂತೆ ಸಚಿವರಿಗೆ ಸೂಚಿಸಿದರು.
ಸಭಾಪತಿಗಳ ಸೂಚನೆಗೆ ಸಮ್ಮತಿಸಿದ ಕಿಮ್ಮನೆ ರತ್ನಾಕರ, ಆಗಸ್ಟ್ 1ರಂದು ಪರಿಷತ್ತಿನ ಕೆಲವು ಹಿರಿಯ ಸದಸ್ಯರು ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ಆಯ್ಕೆಯಾದ ಸದಸ್ಯರನ್ನು ಕರೆದು ಸಭೆ ನಡೆಸುವುದಾಗಿ ತಿಳಿಸಿದರು. ‘ಸದ್ಯ ನಿಯಮಗಳಿಗೆ ಅನುಸಾರವಾಗಿ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆಯುತ್ತಿ ರುವುದನ್ನು ಯಾರಾದರೂ ನನ್ನ ಗಮನಕ್ಕೆ ತಂದರೆ, ಅಕ್ರಮದಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದರು.
ಇದಕ್ಕೂ ಮುನ್ನ ಈ ವಿಷಯವನ್ನು ಪ್ರಸ್ತಾಪಿಸಿದ ಬಸವರಾಜ ಹೊರಟ್ಟಿ, ‘ಶಿಕ್ಷಣ ಸಚಿವರ ಆದೇಶವನ್ನು ಅಧಿಕಾರಿಗಳು ಪಾಲನೆ ಮಾಡುತ್ತಿಲ್ಲ. ತಮಗೆ ತೋಚಿದಂತೆ ಕೆಲಸ ಮಾಡುತ್ತಾರೆ. ಕನ್ನಡದ ಬಗ್ಗೆ ಅಭಿಮಾನವೇ ಇಲ್ಲ. ಕನ್ನಡ ಶಾಲೆಗಳನ್ನು ಮುಚ್ಚಿಸುವುದೇ ಅವರ ಗುರಿಯಾಗಿದೆ’ ಎಂದು ಆರೋಪಿಸಿದರು.
ಇಲಾಖೆಯ ಕೆಲವು ಅಧಿಕಾರಿಗಳು ತೋರುವ ದರ್ಪವನ್ನು ಉದಾಹರಣೆ ಸಹಿತ ವಿವರಿಸಿದ ಹೊರಟ್ಟಿ, ‘ಸಭೆಯೊಂದರಲ್ಲಿ ಹೆಚ್ಚುವರಿ ಶಿಕ್ಷಕರನ್ನು ಬೇಕಾಬಿಟ್ಟಿಯಾಗಿ ವರ್ಗಾವಣೆ ಮಾಡಬೇಡಿ ಎಂದು ಸಲಹೆ ನೀಡಿದ್ದಕ್ಕೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ರಾತ್ರಿ ಎಸ್ಎಂಎಸ್ ಮಾಡಿ, ಯಾಕೆ ನಿಮ್ಮ ಮೇಲೆ ದಲಿತರ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣ ದಾಖಲಿಸಬಾರದು ಎಂದು ನನ್ನನ್ನು ಬೆದರಿಸಿದ್ದರು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.