ಬೆಂಗಳೂರು: `ಬೆಂಗಳೂರು ಪೂರ್ವ ತಾಲ್ಲೂಕು ತಿಗಳರ (ವಹ್ನಿಕುಲ) ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ ಭಾನುವಾರ (ಡಿ.23) ಕೆ.ಆರ್.ಪುರದ ರಾಜೀವ್ಗಾಂಧಿ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ' ಎಂದು ಸಂಘದ ಅಧ್ಯಕ್ಷ ಎಂ.ವೇಣುಗೋಪಾಲ್ ತಿಳಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ರಾಜ್ಯದಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ತುಮಕೂರು, ಮಂಡ್ಯ ಮತ್ತಿತರ ಜಿಲ್ಲೆಗಳಲ್ಲಿ ತಿಗಳ ಸಮುದಾಯದ ಜನರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಹ ಸಮುದಾಯದವರಿಗೆ ರಾಜಕೀಯವಾಗಿ, ಶೈಕ್ಷಣಿಕವಾಗಿ ಅನ್ಯಾಯವಾಗುತ್ತಿದೆ' ಎಂದರು.
`ತಿಗಳ ಜನಾಂಗವನ್ನು ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸಂಘಟಿತರನ್ನಾಗಿ ಮಾಡಲು ಈ ಸಮಾವೇಶವನ್ನು ಆಯೋಜಿಸಲಾಗಿದೆ' ಎಂದು ಹೇಳಿದರು.