ಕೃಷ್ಣರಾಜಪುರ: `ಮಕ್ಕಳು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು~ ಎಂದು ತಹಶೀಲ್ದಾರ್ ಸಿ.ಎಲ್.ಶಿವಕುಮಾರ್ ಕರೆ ನೀಡಿದರು.
ಇಲ್ಲಿನ ತೂಗುಸೇತುವೆ ಸಮೀಪದ ಡಾ.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ತ್ಲ್ಲಾಲೂಕು ಮಟ್ಟದ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ನಂಜುಂಡಯ್ಯ ಮಾತನಾಡಿ, ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ಮಕ್ಕಳಿಗೆ ಎಲ್ಲ ರೀತಿಯ ನೆರವನ್ನು ನೀಡಲಾಗುತ್ತಿದೆ. ಇಲ್ಲಿ ವಿಜೇತರಾದವರನ್ನು ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸಲು ಕಳುಹಿಸಲಾಗುವುದು ಎಂದರು.
ತಾ.ಪಂ. ಅಧ್ಯಕ್ಷ ಮಂಜುನಾಥ್, ಸದಸ್ಯ ರಮೇಶ್, ಜಿ.ಪಂ. ಸದಸ್ಯೆ ಶೋಭಾ ರಮೇಶ್ ಮಾತನಾಡಿದರು. ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ, ಉಪಾಧ್ಯಕ್ಷ ಡಿ.ಮನೋಹರ್, ವೆಂಕಟಪ್ಪ, ಪರಿವೀಕ್ಷಕ ಶೇಖರಪ್ಪ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಎನ್.ವಿ.ಹರಿ ಸ್ವಾಗತಿಸಿದರು. ಉಪಾಧ್ಯಕ್ಷ ಲಕ್ಷ್ಮೀಪತಯ್ಯ ನಿರೂಪಿಸಿದರು. ಗಾಯಕ ನಟರಾಜ್ ಪ್ರಾರ್ಥಿಸಿದರು. ಒಟ್ಟು 18 ಶಾಲೆಗಳಿಂದ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.