ಬೆಂಗಳೂರು: ಸಲಿಂಗರತಿ ಶಿಕ್ಷಾರ್ಹ ಅಪರಾಧ ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರು ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸದಸ್ಯರು ನಗರದ ಪುರಭವನದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂರಾರು ಮಂದಿ ಲೈಂಗಿಕ ಅಲ್ಪಸಂಖ್ಯಾತರು ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಘೋಷಣೆ ಕೂಗಿದರು. ತಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಗೂ ಅಧಿಕಾರವಿಲ್ಲ ಎಂದು ಪ್ರತಿಭಟತಾನಿರತರು ಆಕ್ರೋಶ ವ್ಯಕ್ತಪಡಿಸಿದರು.
‘ದೆಹಲಿ ಹೈಕೋರ್ಟ್ 2009ರಲ್ಲಿ ಸಲಿಂಗರತಿ ಅಪರಾಧವಲ್ಲ ಎಂದು ತೀರ್ಪುಕೊಟ್ಟಿತ್ತು. ನಾಲ್ಕು ವರ್ಷಗಳ ಬಳಿಕ ಆ ತೀರ್ಪನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ಸಲಿಂಗರತಿ ಶಿಕ್ಷಾರ್ಹ ಅಪರಾಧ ಎಂದು ತೀರ್ಪು ನೀಡಿದೆ. ಇದು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ’ ಎಂದು ರಾಜ್ಯ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಮಲ್ಲು ಹೇಳಿದರು.
‘ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್ ಪುನರ್ಪರಿಶೀಲನೆ ನಡೆಸಬೇಕು. ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಯಲು ಸರ್ಕಾರ ಮುಂದಾಗಬೇಕು. ತೀರ್ಪಿನ ವಿರುದ್ಧ ರಾಜ್ಯದೆಲ್ಲೆಡೆ ಹೋರಾಟ ನಡೆಸಲಾಗುವುದು’ ಎಂದರು.