ಬೆಂಗಳೂರು: ಯೋಗಾಸನ ಮಾಡುವ ವೇಳೆ ಬಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿರುವ ಕಾರಣ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಚಾರದಲ್ಲಿ ಇದುವರೆಗೂ ಪಾಲ್ಗೊಂಡಿಲ್ಲ.
‘ಅವರ ಬೆನ್ನು ಮೂಳೆಗೆ ಏಟು ಬಿದ್ದಿರುವ ಕಾರಣ ಹದಿನೈದು ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ಪ್ರಚಾರದಲ್ಲಿ ಭಾಗವಹಿಸಿಲ್ಲ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಒಂದೆರಡು ದಿನಗಳಲ್ಲಿ ಹೆಬ್ಬಾಳ ಕ್ಷೇತ್ರದ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.
‘ದೇವೇಗೌಡ ಅವರನ್ನು ಪ್ರಚಾರದಲ್ಲಿ ಬಳಸಿಕೊಳ್ಳಬೇಕೇ, ಬೇಡವೇ ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಗಾಲಿ ಕುರ್ಚಿಯ ಮೇಲೆ ಕುಳಿತು ಪ್ರಚಾರ ನಡೆಸುವುದಾಗಿ ದೇವೇಗೌಡರು ಹೇಳುತ್ತಿದ್ದಾರೆ’ ಎಂದು ಪಕ್ಷದ ಕಾರ್ಯಕರ್ತರೊಬ್ಬರು ತಿಳಿಸಿದರು.
ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಮತ್ತು ಕೆ. ಗೋಪಾಲಯ್ಯ, ಪಕ್ಷದ ಕಾರ್ಪೊರೇಟರ್ಗಳು ಹೆಬ್ಬಾಳ ಕ್ಷೇತ್ರದಲ್ಲಿ ಪಕ್ಷದ ಪ್ರಚಾರದ ಉಸ್ತುವಾರಿ ಹೊತ್ತಿದ್ದಾರೆ ಎಂದು ಅವರು ತಿಳಿಸಿದರು.